ADVERTISEMENT

ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ತಿಂಗಳಿಗೆ ₹3,500: ಸರ್ಕಾರ ಘೋಷಣೆ

​ಪ್ರಜಾವಾಣಿ ವಾರ್ತೆ
Published 29 ಮೇ 2021, 15:15 IST
Last Updated 29 ಮೇ 2021, 15:15 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ    

ಬೆಂಗಳೂರು: ಕೋವಿಡ್‌ನಿಂದ ತಂದೆ-ತಾಯಿಯರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗಾಗಿ ರಾಜ್ಯ ಸರ್ಕಾರ ‘ಮುಖ್ಯಮಂತ್ರಿ ಬಾಲಸೇವಾ ಯೋಜನೆ’ ಜಾರಿಗೆ ತರಲಿದ್ದು, ತಿಂಗಳಿಗೆ ₹3,500 ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳ ಕಚೇರಿ ಸರಣಿ ಟ್ವೀಟ್‌ ಮಾಡಿದ್ದು, ‘ಕೊರೊನಾದಿಂದ ಅನಾಥರಾಗಿರುವ ಮಕ್ಕಳ ಉತ್ತಮ ಭವಿಷ್ಯ ರೂಪಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ‘ಮುಖ್ಯಮಂತ್ರಿ ಬಾಲಸೇವಾ ಯೋಜನೆ’ಯನ್ನು ಜಾರಿಗೆ ತರಲಾಗಿದೆ’ ಎಂದು ಹೇಳಿದೆ.

‘ಕೋವಿಡ್‌ನಿಂದ ಅನಾಥರಾದ 10 ವರ್ಷದೊಳಗಿನ ಮಕ್ಕಳ ಪೋಷಣೆ ಮತ್ತು ಉತ್ತಮ ಶಿಕ್ಷಣ ಒದಗಿಸುವ ದೃಷ್ಟಿಯಿಂದ ಅಂತಹ ಮಕ್ಕಳನ್ನು ಸರ್ಕಾರಿ ಸ್ವಾಮ್ಯದ ಮಾದರಿ ವಸತಿ ಶಾಲೆಗಳಲ್ಲಿ ದಾಖಲು ಮಾಡಿಕೊಳ್ಳಲಾಗುವುದು. 10ನೇ ತರಗತಿ ಪೂರೈಸಿದ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ನೀಡಲಾಗುವುದು’ ಎಂದು ಸರ್ಕಾರ ತಿಳಿಸಿದೆ.

ADVERTISEMENT

‘21 ವರ್ಷ ತುಂಬಿರುವ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ಸೇರಿದಂತೆ ಮುಂದಿನ ಜೀವನಕ್ಕೆ ಅನುಕೂಲ ಕಲ್ಪಿಸಲು ₹1 ಲಕ್ಷ ನೆರವು ನೀಡಲಾಗುವುದು. ರಕ್ಷಣೆಗೆ ಯಾರೂ ಇಲ್ಲದಂತಹ ಅನಾಥ ಮಕ್ಕಳನ್ನು ನೋಡಿಕೊಳ್ಳಲು ಸರ್ಕಾರದಿಂದ ಮಾರ್ಗದರ್ಶಿ ಅಥವಾ ಹಿತೈಷಿಗಳನ್ನು ನೇಮಿಸಲಾಗುವುದು. ಯೋಜನೆಯ ಸಮಗ್ರ ವಿವರಗಳನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು’ ಎಂದು ಸರ್ಕಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.