ಬೆಂಗಳೂರು: ರಾಜ್ಯದ ನೆರೆ ಇತರ ನೈಸರ್ಗಿಕ ದುರಂತದ ಸಂತ್ರಸ್ತರಿಗೆ ಈಗ ಎನ್ಡಿಆರ್ಎಫ್ ಅಡಿ ನೀಡುತ್ತಿರುವ ಪರಿಹಾರ ಸಾಲದು, ಮಾರ್ಗಸೂಚಿಯನ್ನು ಬದಲಿಸಿ ಹೆಚ್ಚು ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.
ನವದೆಹಲಿಯ ಪಾರ್ಲಿಮೆಂಟ್ ಭವನದಲ್ಲಿ ಶುಕ್ರವಾರ ಬೆಳಿಗ್ಗೆ ಭೇಟಿ ಮಾಡಿದ ಯಡಿಯೂರಪ್ಪ ಅವರು, ‘ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಅಡಿ ನಿಗದಿ ಮಾಡಿರುವ ಪರಿಹಾರದ ಮೊತ್ತ ಸಾಲದು. ಅದನ್ನು ಪರಿಷ್ಕರಿಸಿ ಹೆಚ್ಚಿಸಬೇಕು. ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಪರಿಹಾರ ಕೈಗೊಳ್ಳಲು ಬೇಗನೆ ಹೆಚ್ಚು ಹಣಕಾಸಿನ ನೆರವು ನೀಡಬೇಕು’ ಎಂದು ಹೇಳಿದರು.
ಕೃಷ್ಣಾ ಮೇಲ್ದಂಡೆ ಮೂರನೇ ಹಂತ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳೆಂದು ಘೋಷಿಸಬೇಕು. ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಾದ ಮೇಕೆದಾಟು ಮತ್ತು ಕಳಸಾ ಬಂಡೂರಿ ನಾಲಾ ಯೋಜನೆಗೆಳಿಗೆ ಅನುಮತಿ ನೀಡಲು ಆದಷ್ಟು ಬೇಗ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದೂ ಹೇಳಿದರು.
ನವೆಂಬರ್ನಲ್ಲಿ ನಡೆಯುವ ‘ಬೆಂಗಳೂರು ಟೆಕ್ ಸಮಿಟ್’ ಅನ್ನು ವರ್ಚುವಲ್ ಆಗಿ ಉದ್ಘಾಟಿಸುವಂತೆಯೂ ಯಡಿಯೂರಪ್ಪ ಆಹ್ವಾನ ನೀಡಿದರು.
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ ಅವರು, ಕೃಷ್ಣಾ ಮೇಲ್ದಂಡೆ ಮೂರನೇ ಹಂತ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳೆಂದು ಘೋಷಿಸಲು ಮನವಿ ಮಾಡಿದರು.
ರಾಜ್ಯಕ್ಕೆ ಹಂಚಿಕೆಯಾಗಿರುವ ನೀರನ್ನು ಬಳಸಿಕೊಳ್ಳಲು ಮೇಕೆದಾಟು ಮತ್ತು ಕಳಸಾ ಬಂಡೂರಿ ನಾಲಾ ಯೋಜನೆಗಳಿಗೆ ಕಾರ್ಯಗತಗೊಳಿಸಲು ಅನುಮತಿ ನೀಡಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮಾಡಿ, ಈ ಎರಡೂ ಯೋಜನೆಗಳನ್ನು ಆರಂಭಿಸಲು ಪರಿಸರ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿದರು.
ನಿರ್ವಹಣಾ ನಿಧಿ ಬಿಡುಗಡೆಗೆ ಒತ್ತಾಯ
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿಯವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ನಗರ ಸ್ಥಳೀಯ ಸಂಸ್ಥೆಗಳಿಗೆ ₹29.52 ಕೋಟಿ ನಿರ್ವಹಣಾ ನಿಧಿ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಬಳ್ಳಾರಿ, ಕಲಬುರ್ಗಿ, ಮೈಸೂರು ಮತ್ತು ವಿಜಯಪುರ ನಗರಪಾಲಿಕೆಗಳನ್ನು ಕೇಂದ್ರ ಸರ್ಕಾರದ ಸ್ಮಾರ್ಟ್ಸಿಟಿ ಯೋಜನೆ ವ್ಯಾಪ್ತಿಗೆ ಒಳಪಡಿಸಬೇಕು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.