ADVERTISEMENT

ನೇರ ನಗದು ವರ್ಗಾವಣೆ: ‘ಡಿಬಿಟಿ’ ಆ್ಯಪ್‌ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಪಿಟಿಐ
Published 10 ಜೂನ್ 2021, 9:23 IST
Last Updated 10 ಜೂನ್ 2021, 9:23 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಡಿಬಿಟಿ ಮೊಬೈಲ್‌ ಆ್ಯಪ್‌ ಅನ್ನು ಬಿಡುಗಡೆ ಮಾಡಿದರು –ಟ್ವಿಟರ್ ಚಿತ್ರ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಡಿಬಿಟಿ ಮೊಬೈಲ್‌ ಆ್ಯಪ್‌ ಅನ್ನು ಬಿಡುಗಡೆ ಮಾಡಿದರು –ಟ್ವಿಟರ್ ಚಿತ್ರ   

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ನೇರವಾಗಿ ಹಣ ವರ್ಗಾವಣೆ ಮಾಡಲು 'ನೇರ ನಗದು ವರ್ಗಾವಣೆ' (ಡಿಬಿಟಿ) ಮೊಬೈಲ್‌ ಆ್ಯಪ್‌ ಅನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗುರುವಾರ ಬಿಡುಗಡೆ ಮಾಡಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ‘ಸರ್ಕಾರದ 120 ಯೋಜನೆಗಳನ್ನು ಡಿಬಿಟಿ ಆ್ಯಪ್‌ನೊಂದಿಗೆ ಜೋಡಣೆ ಮಾಡಲಾಗಿದೆ. ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಮಾಡಿರುವವರಿಗೆ ಮಾತ್ರ ಈ ಪದ್ದತಿಯಲ್ಲಿ ಹಣ ವರ್ಗಾವಣೆ ಆಗಲಿದೆ’ ಎಂದು ಹೇಳಿದ್ದಾರೆ.

‘ಕಳೆದ ಎರಡು ವರ್ಷಗಳಲ್ಲಿ ₹12,000 ಕೋಟಿಗೂ ಹೆಚ್ಚು ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ಈ ಪದ್ಧತಿಯಿಂದಾಗಿ ವಿವಿಧ ಯೋಜನೆಗಳಲ್ಲಿ ಹಣದ ಸೋರಿಕೆ ತಡೆಗಟ್ಟಲು ಹೆಚ್ಚು ಅನುಕೂಲವಾಗುತ್ತದೆ. ಕೋವಿಡ್–19 ಮೊದಲ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿದ ಎಲ್ಲಾ ಪ್ಯಾಕೇಜ್‌ಗಳನ್ನು ಡಿಬಿಟಿ ಮೂಲಕವೇ ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರು ಡಿಬಿಟಿ ಮೊಬೈಲ್‌ ಆ್ಯ‍ಪ್‌ ಅನ್ನು ಬಳಸಿದಾಗ ಮಾತ್ರ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಸಾಧ್ಯವಾಗುತ್ತದೆ. ಜತೆಗೆ, ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.