ADVERTISEMENT

ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಖಾಸಗಿ ನೆರವು ಅಗತ್ಯ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 9:24 IST
Last Updated 17 ಜೂನ್ 2020, 9:24 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ರೈತರನ್ನು ಸಂಕಷ್ಟದಿಂದ ಮೇಲೆತ್ತುವ ಸರ್ಕಾರದ ಕಾರ್ಯದಲ್ಲಿ ಖಾಸಗಿ ಸಂಸ್ಥೆಗಳೂ ಕೈ ಜೋಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕಷ್ಣಾ’ದಲ್ಲಿ ಬುಧವಾರ ರೈತರಿಗೆ ಬಿತ್ತನೆ ಬೀಜಗಳ ಕಿಟ್‌ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೋವಿಡ್‌–19ನಿಂದಾಗಿ ಇಡೀ ದೇಶದ ಆರ್ಥಿಕ ವ್ಯವಸ್ಥೆ ಸಂಕಷ್ಟಕ್ಕೆ ಸಿಲುಕಿದೆ. ಕೃಷಿ ಕ್ಷೇತ್ರವೂ ಇದಕ್ಕೆ ಹೊರತಲ್ಲ. ಸಣ್ಣ ಹಿಡುವಳಿದಾರರು ತಮ್ಮ ಬೆಳೆಗಳ ಕೊಯ್ಲಿನ ಬಳಿಕ ಮತ್ತು ಕೃಷಿ ಭೂಮಿ ನಿರ್ವಹಣೆಗಾಗಿ ವಲಸೆ ಕಾರ್ಮಿಕರನ್ನು ಅವಲಂಬಿಸಿದ್ದಾರೆ. ಕೋವಿಡ್‌ನಿಂದಾಗಿ ಕೃಷಿ ಚಟುವಟಿಕೆ ನಡೆಸಲಾಗದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.

ADVERTISEMENT

ರೈತರು ತಮ್ಮ ಕುಟುಂಬ, ಕೃಷಿ, ಪಶುಸಂಗೋಪನೆಗಳ ನಿರ್ವಹಣೆಯನ್ನು ನಡೆಸುವುದು ಕಷ್ಟವಾಗಿದೆ. ಆದ್ದರಿಂದ ಖಾಸಗಿ ಸಂಸ್ಥೆಗಳು ರೈತರ ನೆರವಿಗೆ ಬರಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದರು.

ಕೋವಿಡ್‌ನಿಂದಾಗಿ ಉದ್ಭವಿಸಿರುವ ಸಂಕಷ್ಟದಿಂದ ಹೊರಬರಲು ರಾಜ್ಯದ ಎಲ್ಲ ವರ್ಗದ ಜನರಿಗಾಗಿ ₹2.284 ಕೋಟಿ ಪರಿಹಾರ ಪ್ಯಾಕೇಜ್‌ ಘೋಷಿಸಲಾಯಿತು. 47.81 ಲಕ್ಷ ರೈತರಿಗೆ ತಲಾ ₹2,000 ವಿತರಿಸಲು ₹956.36 ಕೋಟಿಯನ್ನು ವರ್ಗಾಯಿಸಲಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಪಿ.ಎಂ ಕಿಸಾನ್‌ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ನೀಡುವ ₹4,000 ಪೈಕಿ ₹2,000ಗಳ ಎರಡನೇ ಕಂತನ್ನು 50 ಲಕ್ಷ ರೈತರ ಖಾತೆಗೆ ₹1,000 ಕೋಟಿ ಜಮೆ ಮಾಡಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.