ಬೆಂಗಳೂರು: ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿ ಜತೆ ರಹಸ್ಯ ಮಾತುಕತೆ ನಡೆಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಪದಚ್ಯುತಿಗೆ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಬಿಗಿಪಟ್ಟು ಹಿಡಿದಿದ್ದಾರೆ ಎಂಬುದು ಈ ರಹಸ್ಯ ಮಾತುಕತೆಯ ಸಾರಾಂಶವೇ? ಎಂದು ಬಿಜೆಪಿ ಟ್ವೀಟ್ ಮೂಲಕ ಪ್ರಶ್ನಿಸಿದೆ.
ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನರ ಬಳಿಗೆ ಓಡುವುದನ್ನು ಬಿಟ್ಟು ಬಿಜೆಪಿ ನಾಯಕರು ದೆಹಲಿಗೆ ಓಡುತ್ತಾರೆ. ಸಿಎಂ ಯಡಿಯೂರಪ್ಪ, ಮುರುಗೇಶ್ ನಿರಾಣಿ, ಕಟೀಲ್ ಎಲ್ಲರೂ ದೆಹಲಿಗೆ ದೌಡಾಯಿಸುತ್ತಿದ್ದಾರೆ. ಕೊರೊನಾ ಹೆಚ್ಚಾಗುತ್ತಿದೆ. ಅದರ ಬಗ್ಗೆ ಯಾರಿಗೂ ಗಮನವಿಲ್ಲ ಎಂದು ಟೀಕಿಸಿ ರಾಜ್ಯ ಕಾಂಗ್ರೆಸ್ ಮಾಡಿದ್ದ ಟ್ವೀಟ್ಗೆ ಪ್ರತಿಯಾಗಿ ಬಿಜೆಪಿ ಈ ಟ್ವೀಟಾಸ್ತ್ರ ಪ್ರಯೋಗಿಸಿದೆ.
ಸಿದ್ದರಾಮಯ್ಯ ಈಗ ತೆರೆಮರೆಯ ಆಟ ಆರಂಭಿಸಿದ್ದಾರೆ! ರಾಹುಲ್ ಗಾಂಧಿ ಜೊತೆಗಿನ ರಹಸ್ಯ ಮಾತುಕತೆಯ ಅರ್ಥ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವುದೇ? ಎಂದು ಬಿಜೆಪಿ ಪ್ರಶ್ನಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯನವರು ದೆಹಲಿಗೆ ತೆರಳಿದ್ದು ಯಾವ ಸೇವೆಗಾಗಿ? ಗಾಂಧಿ ಕುಟುಂಬದ ಪಾದಪೂಜೆಗಾಗಿಯೋ!? ಎಂದು ಬಿಜೆಪಿ ಕುಟುಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.