ಬೆಂಗಳೂರು: ಪಿಕ್ ಪ್ಯಾಕೆಟ್ ಮಾಡುತ್ತಿದ್ದ ಬಿಜೆಪಿ ಸರ್ಕಾರ ಈಗ ಲೂಟಿಯಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಜನಸಾಮಾನ್ಯರ ಪಿಕ್ ಪ್ಯಾಕೆಟ್ ಮಾಡುತ್ತಿದ್ದ ಬಿಜೆಪಿ ಸರ್ಕಾರ ಈಗ ಪೂರ್ಣ ಪ್ರಮಾಣದ ಲೂಟಿಕೋರ ಸರ್ಕಾರವಾಗಿ ಬದಲಾಗಿದೆ. ರೈತರ ಆದಾಯ ಡಬಲ್ ಮಾಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಡಿಎಪಿ ಗೊಬ್ಬರದ ಬೆಲೆ ಜಾಸ್ತಿ ಮಾಡಿ ಅನ್ನದಾತರ ಕಿಸೆಗೂ ಕೈ ಹಾಕಿದೆ’ ಎಂದು ಹರಿಹಾಯ್ದಿದ್ದಾರೆ.
‘ಡಿಎಪಿ ಗೊಬ್ಬರದ ಬೆಲೆ ಏರಿಕೆಯಿಂದಾಗಿ ರಾಜ್ಯದ ರೈತರ ಮೇಲೆ ವಾರ್ಷಿಕ ₹3600 ಕೋಟಿ ಹೆಚ್ಚುವರಿ ಹೊರೆ ಬಿದ್ದಿದೆ. ಬಿಜೆಪಿ ಸರ್ಕಾರಕ್ಕೆ ಬೆಲೆ ಏರಿಕೆ ಮೇಲೆ ನಿಯಂತ್ರಣ ಸಾಧಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ' ಎಂದು ಡಿಕೆಶಿ ಆರೋಪಿಸಿದ್ದಾರೆ.
‘ಕಚ್ಛಾ ತೈಲದ ಬೆಲೆ ಕಡಿಮೆಯಿದ್ದಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿತ್ತು. ಈಗ ರಷ್ಯಾ- ಉಕ್ರೇನ್ ಯುದ್ಧದ ಕಾರಣವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಸಿಮೆಂಟ್, ಕಬ್ಬಿಣ, ಅಡುಗೆ ಎಣ್ಣೆ, ಇಂಧನದ ಬೆಲೆ ನಿರಂತರವಾಗಿ ಏರುತ್ತಿದೆ. ಲೂಟಿಕೋರ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ’ ಎಂದು ಅವರು ಹೇಳಿದ್ದಾರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.