ಬೆಂಗಳೂರು: ರಾಜ್ಯ ಸರ್ಕಾರದ ಮತಾಂತರ ನಿಷೇಧ ಮಸೂದೆ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ತೀವ್ರವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ಗಳನ್ನು ಮಾಡಿರುವ ಅವರು, ‘ಬಿಜೆಪಿ ಸರಕಾರ ನಾಡಿನ ಸಮಸ್ಯೆಗಳನ್ನು ʼವಿಷಯಾಂತರʼ ಮಾಡಲು ʼಮತಾಂತರʼ ಗುಮ್ಮವನ್ನು ತಂದು ನಿಲ್ಲಿಸಿದೆ ಎಂದು ಆರೋಪಿಸಿದ್ದಾರೆ.ಸುವರ್ಣಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧ ಮಾಡಿರುವ ಕ್ರಮ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ’ ಎಂದಿದ್ದಾರೆ.
‘ನಾಡಿನ ಜನರು ಮತ್ತು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರಾಜಕೀಯದ ಲಾಭದ ದುರಾಸೆಗೆ ರಾಜ್ಯದ ಸಾಮರಸ್ಯಕ್ಕೆ ಬೆಂಕಿ ಇಡುವ ಮತಾಂತರ ನಿಷೇಧ ಮಸೂದೆಯ ನಿಜ ಬಣ್ಣ ಎಲ್ಲಿ ಬಯಲಾಗುತ್ತದೋ ಎಂದು ಅಂಜಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ’ ಎಂಬ ಸಂಶಯ ಇದೆ ಎಂದು ಎಚ್ಡಿಕೆ ಹೇಳಿದ್ದಾರೆ.
‘ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ಮಾಧ್ಯಮ ರಂಗವು ಸಂವಿಧಾನದ ಒಂದು ಅಂಗ. ಈಗ ಮಾಧ್ಯಮ ಪ್ರವೇಶಕ್ಕೆ ನಿರ್ಬಂಧ ಹೇರುವ ಮೂಲಕ ʼಸಂವಿಧಾನದ ಒಂದು ಕಾಲು ಮುರಿಯುವ ಪ್ರಯತ್ನʼ ಮಾಡಲಾಗುತ್ತಿದೆ.ಇದು ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆ ಎನ್ನುವವರ ದರ್ಪದ ಹೆಜ್ಜೆಯಷ್ಟೇ. ಅವರ ದುರುದ್ದೇಶ ಸ್ಪಷ್ಟ’ ಎಂದು ಮತ್ತೊಂದು ಟ್ವೀಟ್ನಲ್ಲಿ ಹೇಳಿದ್ದಾರೆ.
‘ಈ ಮಧ್ಯೆ ಮಾನ್ಯ ಸ್ಪೀಕರ್ ಅವರು ಮಾಧ್ಯಮ ನಿರ್ಬಂಧದ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ. ಹಾಗಾದರೆ, ನಿರ್ಬಂಧ ಹೇರಿದವರು ಯಾರು? ಸ್ಪೀಕರ್ ಅವರಿಗೆ ಗೊತ್ತಿಲ್ಲದೆ ನಿರ್ಬಂಧದ ಸಂದೇಶ ಮಾಧ್ಯಮಗಳಿಗೆ ಕೊಟ್ಟವರು ಯಾರು? ಈ ಬಗ್ಗೆ ಜನರಿಗೆ ಸತ್ಯಾಂಶ ಗೊತ್ತಾಗಬೇಕಿದೆ’ ಎಂದು ಎಚ್ಡಿಕೆ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.