ADVERTISEMENT

ಸಾಲ ವಿತರಣೆಯಲ್ಲಿ ಶೇ 68.18 ಗುರಿ ಸಾಧನೆ: ಎಸ್.ಟಿ. ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 24 ಜನವರಿ 2022, 9:17 IST
Last Updated 24 ಜನವರಿ 2022, 9:17 IST
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್   

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸಹಕಾರ ಸಂಘಗಳ ಮೂಲಕ 30.86 ಲಕ್ಷ ರೈತರಿಗೆ ₹20,810 ಕೋಟಿ ಸಾಲ‌ ವಿತರಿಸುವ ಗುರಿ ಹೊಂದಿದ್ದು, ಈವರೆಗೆ ಶೇಕಡ 68.18ರಷ್ಟು ಗುರಿ ಸಾಧಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

ಸಹಕಾರ ಸಂಘಗಳ‌ ರಿಜಿಸ್ಟ್ರಾರ್ ಕಚೇರಿಯಲ್ಲಿ ಸೋಮವಾರ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಈವರೆಗೆ ಒಟ್ಟು 19.58 ಲಕ್ಷ ರೈತರಿಗೆ 14,188 ಕೋಟಿ ಸಾಲ ವಿವರಿಸಲಾಗಿದೆ. ಈ ಪೈಕಿ 19.27 ಲಕ್ಷ ರೈತರಿಗೆ ₹13,295 ಕೋಟಿ ಅಲ್ಪಾವಧಿ ಕೃಷಿ ಸಾಲ‌ ನೀಡಿದ್ದರೆ, 31,000 ರೈತರಿಗೆ ₹893 ಕೋಟಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ನೀಡಲಾಗಿದೆ' ಎಂದು ವಿವರಿಸಿದರು.

19,196 ಸ್ವಸಹಾಯ ಗುಂಪುಗಳಿಗೆ ₹689 ಕೋಟಿ ಸಾಲ ನೀಡಲಾಗಿದೆ. ಆತ್ಮನಿರ್ಭರ ಯೋಜನೆಯಡಿ 873 ಸಹಕಾರ ಸಂಘಗಳಿಗೆ ₹302 ಕೋಟಿ ಸಾಲ ಮಂಜೂರು ಮಾಡಲಾಗಿದೆ. ಅದರಲ್ಲಿ 581 ಸಂಘಗಳಿಗೆ ₹72.73 ಕೋಟಿ ಸಾಲ ವಿತರಿಸಲಾಗಿದೆ ಎಂದರು.

ADVERTISEMENT

ಮಾರ್ಚ್ 25ರೊಳಗೆ ಸಾಲ‌ ವಿತರಣೆಯಲ್ಲಿ ಸಂಪೂರ್ಣ ಗುರಿ ಸಾಧಿಸುವಂತೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಒಂದೇ ತಂತ್ರಾಂಶಕ್ಕೆ ಯೋಜನೆ: ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗಳು ಮತ್ತು ಎಲ್ಲ ಕೃಷಿ ಪತ್ತಿನ ಪ್ರಾಥಮಿಕ ಸಹಕಾರ ಸಂಘಗಳಿಗೆ ಒಂದೇ ತಂತ್ರಾಂಶ ಅಳವಡಿಸಲು ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಕೇಂದ್ರವು ಶೇ 60ರಷ್ಟು ಅನುದಾನ ನೀಡಲಿದೆ. ಉಳಿದ ಶೇ 40ರಷ್ಟನ್ನು ರಾಜ್ಯ ಸರ್ಕಾರ, ಅಪೆಕ್ಸ್ ಮತ್ತು ಡಿಸಿಸಿ ಬ್ಯಾಂಕ್ ಗಳು ಭರಿಸಬೇಕು. ಈ ಕುರಿತು ಚರ್ಚಿಸಲು ಇದೇ 27ರಂದು ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.