ಬೆಂಗಳೂರು: ಕೋವಿಡ್ ಲಾಕ್ಡೌನ್ ವಿಸ್ತರಿಸುವ ಮತ್ತು ಸಂಕಷ್ಟದಲ್ಲಿರುವವರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡುವ ಬಗ್ಗೆ ಬುಧವಾರ ಬೆಳಿಗ್ಗೆ ನಡೆಯುವ ಸಚಿವರ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಸಭೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ ಸ್ಥಿತಿಗತಿಯ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದು, ಅಲ್ಲಿ ತೀರ್ಮಾನ ಪ್ರಕಟಿಸಬಹುದು ಎಂದು ಮೂಲಗಳು ತಿಳಿಸಿವೆ.
ಲಾಕ್ಡೌನ್ ಇದೇ 24 ಕ್ಕೆ ಕೊನೆಗೊಳ್ಳಲಿದೆ. ಆದರೆ, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆ ಆಗದಿರುವ ಕಾರಣ ಲಾಕ್ಡೌನ್ ಮುಂದುವರಿಸಬೇಕು ಎಂಬ ಒತ್ತಡ ಹೆಚ್ಚಾಗಿದೆ. ಬಹುತೇಕ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ತಿಂಗಳ ಕೊನೆಯವರೆಗೆ ಲಾಕ್ಡೌನ್ ಮುಂದುವರಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಲಾಕ್ಡೌನ್ನಿಂದ ಸಂಕಷ್ಟದಲ್ಲಿ ಇರುವವರಿಗಾಗಿ ಆರ್ಥಿಕ ಪ್ಯಾಕೇಜ್ ನೀಡಲು ಚಿಂತನೆ ನಡೆದಿದ್ದು, ನಾಳೆ ಈ ಬಗ್ಗೆ ತೀರ್ಮಾನ ತೆಗೆದುಕೊಂಡು, ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ಬಳಿಕ ಜಾರಿ ಮಾಡಬಹುದು. ಸಂಕಷ್ಟದಲ್ಲಿರುವವರಿಗೆ ಪ್ಯಾಕೇಜ್ ನೀಡಬೇಕು ಎಂದು ವಿರೋಧ ಪಕ್ಷಗಳೂ ಒತ್ತಾಯಿಸಿವೆ.
ಕಳೆದ ಬಾರಿಯಂತೆ ಪ್ಯಾಕೇಜ್ ಪ್ರಕಟಿಸುವ ಸಾಧ್ಯತೆ ಇಲ್ಲ. ತೀರಾ ಸಂಕಷ್ಟದಲ್ಲಿ ಇದ್ದವರಿಗೆ ಸೀಮಿತವಾಗಿ ಆರ್ಥಿಕ ನೆರವಿನ ಪ್ಯಾಕೇಜ್ ನೀಡಬಹುದು ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.