ಮನಮೋಹನ ಸಿಂಗ್, ಡಿ.ಕೆ. ಶಿವಕುಮಾರ್
(ಚಿತ್ರ: ಪಿಟಿಐ, ಪ್ರಜಾವಾಣಿ)
ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ಗೌರವಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲು ಚಿಂತಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಶುಕ್ರವಾರ) ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ನೀಡಿರುವ ಡಿ.ಕೆ. ಶಿವಕುಮಾರ್, 'ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪರಿವರ್ತನಾತ್ಮಕ ಆರ್ಥಿಕ ಸುಧಾರಣೆಗಳ ಮೂಲಕ ಅವರ ಪರಂಪರೆ ಜೀವಂತವಾಗಿದೆ. ಅವರ ಕೊಡುಗೆಗಳನ್ನು ಗೌರವಿಸಲು, ಅವರ ದೂರದೃಷ್ಟಿಯ ನೀತಿಗಳನ್ನು ಅಧ್ಯಯನ ಮಾಡಲು, ಭಾರತದ ಭವಿಷ್ಯವನ್ನು ರೂಪಿಸಲು ಹಾಗೂ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲು ನಾವು ಚಿಂತಿಸುತ್ತಿದ್ದೇವೆ' ಎಂದು ತಿಳಿಸಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರಿಗೆ ಡಿ.ಕೆ. ಶಿವಕುಮಾರ್ ಪತ್ರ ಬರೆದಿದ್ದಾರೆ.
ಕೆಪಿಸಿಸಿ ವತಿಯಿಂದ ಶುಕ್ರವಾರ ನಡೆದ ಮನಮೋಹನ ಸಿಂಗ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಮಾಜಿ ಪ್ರಧಾನಿ, ಶ್ರೇಷ್ಠ ಅರ್ಥಶಾಸ್ತ್ರಜ್ಞ ಮನಮೋಹನ ಸಿಂಗ್ ಅವರ ಹೆಸರಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಕೇಂದ್ರ ಸ್ಥಾಪಿಸಲಾಗುವುದು. ಜಗತ್ತಿನ ಎಲ್ಲೆಡೆಯಿಂದ ಆಸಕ್ತರು ಅಲ್ಲಿಗೆ ಅಧ್ಯಯನಕ್ಕೆ ಬರುವಂತೆ ಮಾಡಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.