ಸಿದ್ದರಾಮಯ್ಯ
ಬೆಂಗಳೂರು: ‘ಬರ ಪರಿಹಾರ ಕಾಮಗಾರಿಗೆ ರಾಜ್ಯ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆ ಮಾಡಿದೆ. ಆದರೆ, ಕುಮಾರಸ್ವಾಮಿಗೆ ಆ ಮಾಹಿತಿಯೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
‘ಬರ ಪರಿಹಾರ ಜನರಿಗೆ ಈವರೆಗೂ ತಲುಪಿಲ್ಲ’ ಎಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಬರ ಪರಿಹಾರಕ್ಕೆ ಎಲ್ಲ ಜಿಲ್ಲಾಧಿಕಾರಿಗಳ ವೈಯಕ್ತಿಕ ಠೇವಣಿ (ಪಿ.ಡಿ) ಖಾತೆಗೆ ಸುಮಾರು ₹ 800 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಕುಡಿಯುವ ನೀರು, ಮೇವು ಸೇರಿದಂತೆ ಇತರ ಪರಿಹಾರ ಕಾರ್ಯಗಳಿಗೆ ವಿನಿಯೋಗಿಸಲಾಗುವುದು’ ಎಂದರು.
‘ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ, ಅಲ್ಲಿಂದ ಪರಿಹಾರ ಮೊತ್ತ ಇನ್ನೂ ತಲುಪಿಲ್ಲ’ ಎಂದರು.
ಅನ್ಯಾಯ ಸರಿಪಡಿಸಲಿ: ‘ಬಿಜೆಪಿ ನಾಯಕರು ಬರ ಪ್ರವಾಸ ಕೈಗೊಳ್ಳುವ ಬದಲು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯವನ್ನು ಮೊದಲು ಸರಿಪಡಿಸಲಿ. ರಾಜ್ಯದ ಎಲ್ಲಾ ಸಂಸದರನ್ನು ಕರೆದುಕೊಂಡು ಹೋಗಿ ಬರ ಪರಿಹಾರಕ್ಕೆ ಕೇಂದ್ರದಿಂದ ಹಣ ಬಿಡುಗಡೆ ಮಾಡಿಸಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
‘ರಾಜ್ಯದಲ್ಲಿರುವ ಬರ ಪರಿಸ್ಥಿತಿಯ ಕುರಿತು ಕೇಂದ್ರದಿಂದ ಬಂದ ಅಧಿಕಾರಿಗಳು ಈಗಾಗಲೇ ಅಲ್ಲಿನ ಸರ್ಕಾರಕ್ಕೆ ವರದಿ ನೀಡಿದ್ದಾರೆ. 100 ದಿನ ಇರುವ ಉದ್ಯೋಗ ಖಾತ್ರಿ ಯೋಜನೆಯ ಮಾನವ ದಿನಗಳನ್ನು 150 ದಿನಕ್ಕೆ ಹೆಚ್ಚಿಸಲಿ’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.