ADVERTISEMENT

ಚುನಾವಣಾ ರಾಜಕಾರಣದಿಂದ ಅನಿತಾ ದೂರ: ಪುತ್ರ ನಿಖಿಲ್‌ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2023, 9:14 IST
Last Updated 4 ಏಪ್ರಿಲ್ 2023, 9:14 IST
   

ರಾಮನಗರ: ಅನಿತಾ ಕುಮಾರಸ್ವಾಮಿ ಮತ್ತೆ ಟಿಕೆಟ್ ಆಕಾಂಕ್ಷಿ ಅಲ್ಲ. ಅವರಿಗೆ ಆಸಕ್ತಿಯೂ ಇಲ್ಲ ಎಂದು ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಮಂಗಳವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು. ‘ಬೆಳಿಗ್ಗೆಯೂ ನಮ್ಮ ಮನೆಯಲ್ಲಿ ಇದೇ ವಿಚಾರ ಚರ್ಚೆ ನಡೆಯಿತು. ಆದರೆ ಅನಿತಾ ಕುಮಾರಸ್ವಾಮಿ ಈಗಾಗಲೇ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಎಲ್ಲ ಪಕ್ಷದಲ್ಲಿಯೂ ಒಂದಿಷ್ಟು ಗೊಂದಲಗಳು ಇರುತ್ತವೆ. ಈ ವಿಚಾರದಲ್ಲಿ ದೇವೇಗೌಡರ ತೀರ್ಮಾನವೇ ಅಂತಿಮ’ ಎಂದರು.

‘ ನನ್ನ ತಾಯಿ ಈ ಹಿಂದೆ ಮಧುಗಿರಿ, ಚನ್ನಪಟ್ಟಣ ಹಾಗೂ ರಾಮನಗರದಲ್ಲಿ ಅನಿವಾರ್ಯವಾಗಿ ಸ್ಪರ್ಧೆ ಮಾಡಿದ್ದರು. ಕಳೆದ ಬಾರಿ ಉಪ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧೆಗೆ ನನಗೂ ಒತ್ತಡ ಇತ್ತು. ಆಗ ನಾನು ಸಿನಿಮಾದಲ್ಲಿ ಬ್ಯುಸಿ ಆಗಿದ್ದೆ. ಹೀಗಾಗಿ ಅವರು ಅನಿವಾರ್ಯವಾಗಿ ಸ್ಪರ್ಧೆ ಮಾಡಿ ಗೆದ್ದರು. ಅದಕ್ಕೆ ತಕ್ಕಂತೆ ಕ್ಷೇತ್ರದಲ್ಲಿ ಉತ್ತಮವಾಗಿ ಕೆಲಸವನ್ನೂ ಮಾಡಿದ್ದಾರೆ’ ಎಂದರು.

ADVERTISEMENT

‘ ಜೆಡಿಎಸ್‌ ಹೋರಾಟದ ಹಿನ್ನೆಲೆಯಲ್ಲಿ ಬೆಳೆದುಬಂದ ಪಕ್ಷ. ಅದನ್ನು ಉಳಿಸಿಕೊಳ್ಳಲು ನಾವೆಲ್ಲ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಪಕ್ಷ ಬಯಸಿದರೆ, ಕಾರ್ಯಕರ್ತರು ತೀರ್ಮಾನ ಮಾಡಿದರೆ ನಾನೇ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ’ ಎಂದು ಸ್ಪಷ್ಟನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.