ADVERTISEMENT

Karnataka Election 2023 | ಕಾಂಗ್ರೆಸ್‌ನತ್ತ ಸಚಿವ ವಿ. ಸೋಮಣ್ಣ ಚಿತ್ತ?

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2023, 0:15 IST
Last Updated 5 ಮಾರ್ಚ್ 2023, 0:15 IST
   

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯ ಹಿರಿಯ ಶಾಸಕರನ್ನು ಸೆಳೆಯಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದು, ವಸತಿ ಸಚಿವ ವಿ. ಸೋಮಣ್ಣ ಜೊತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಂದಿನ ವಾರ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಐದು ಬಾರಿ ಶಾಸಕರಾಗಿರುವ ಸೋಮಣ್ಣ ಅವರು ನಗರದ ಗೋವಿಂದರಾಜನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ‘ಸೋಮಣ್ಣ ಜೊತೆ ‌ಪೂರ್ವಭಾವಿ ಮಾತುಕತೆ ನಡೆಸಲಾಗಿದೆ’ ಎಂದು ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಆದರೆ, ಈ ಬಗ್ಗೆ ಪ್ರತಿಕ್ರಿಯೆಗೆ ಸೋಮಣ್ಣ ಲಭ್ಯರಾಗಲಿಲ್ಲ. ‘ಇದು ಊಹಾಪೋಹ. ಈ ಬಗ್ಗೆ ಸಚಿವರು ಸದ್ಯಕ್ಕೆ ಪ್ರತಿಕ್ರಿಯಿಸುವುದಿಲ್ಲ’ ಎಂದು ಅವರ ಆಪ್ತ ಮೂಲಗಳು ಹೇಳಿವೆ.

ಇತ್ತೀಚೆಗೆ ಚಾಮರಾಜನಗರದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾಗವಹಿಸಿದ್ದ ‘ವಿಜಯ ಸಂಕಲ್ಪ’ ಸಭೆಗೆ ಚಾಮರಾಜನಗರದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸೋಮಣ್ಣ ಗೈರಾಗಿದ್ದರು. ಚಾಮರಾಜನಗರದ ಪ್ರಚಾರ ಹೊಣೆಯನ್ನು ಕೆ.ಎಸ್. ಈಶ್ವರಪ್ಪ ಅವರಿಗೆ ನೀಡಿರುವುದು ಸೋಮಣ್ಣ ಅವರ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.