ADVERTISEMENT

ಗೋರಕ್ಷಕರು– ಗೋಹಂತಕರ ಪರ ಇರುವವರ ಹೋರಾಟ: ಸಚಿವ ಪ್ರಭು ಚೌಹಾಣ್‌

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2023, 22:30 IST
Last Updated 28 ಫೆಬ್ರುವರಿ 2023, 22:30 IST
   

ಬೆಂಗಳೂರು: ಈ ವಿಧಾನಸಭಾ ಚುನಾವಣೆ ಗೋರಕ್ಷಕರು ಮತ್ತು ಗೋಹತ್ಯೆ ಪರ ಇರುವವರ ಮಧ್ಯದ ಹೋರಾಟ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಹೇಳಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದು ಮಾಡುವುದಾಗಿ ಪದೇ ಪದೇ ಹೇಳುತ್ತಿದೆ. ಇದು ಕಾಂಗ್ರೆಸ್‌ನ ಮನಸ್ಥಿತಿಗೆ ಸಾಕ್ಷಿ ಎಂದು ಅವರು ಹೇಳಿದರು.

‘ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಗೋಹತ್ಯೆಯನ್ನು ನಿಲ್ಲಿಸಿದೆ. ಹಿಂದೆ ಕಾಂಗ್ರೆಸ್‌ ಅವಧಿಯಲ್ಲಿ ಗೋಹತ್ಯೆ ಅವ್ಯಾಹತವಾಗಿ ನಡೆಯುತ್ತಿತ್ತು. ನಮ್ಮ ಸರ್ಕಾರ ಗೋವುಗಳ ರಕ್ಷಣೆಯ ಜೊತೆಗೆ ಹಿಂದು ಪರಂಪರೆ ಮತ್ತು ಸಂಪ್ರದಾಯದ ರಕ್ಷಣೆಯನ್ನೂ ಮಾಡಿದೆ’ ಎಂದರು.

ADVERTISEMENT

‘ಗೋವುಗಳು ಮತ್ತು ಶ್ರೀಮಂತ ಭಾರತೀಯ ಸಂಸ್ಕೃತಿಯನ್ನು ನಾಶ ಮಾಡುವ ಬಗ್ಗೆ ಕಾಂಗ್ರೆಸ್‌ ನಾಯಕರು ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಬಿಜೆಪಿ ಸರ್ಕಾರ ಹೈನುಗಾರಿಕೆಯಲ್ಲಿ ಕ್ರಾಂತಿ ಮಾಡಿದೆ. ಆದರೆ, ಗೋಸಂಪತ್ತಿನ ಅಭಿವೃದ್ಧಿಗೆ ಕಾಂಗ್ರೆಸ್‌ ಪಕ್ಷದ ಕೊಡುಗೆ ಏನು’ ಎಂದು ಪ್ರಶ್ನಿಸಿದ ಅವರು, ‘ಕಸಾಯಿಖಾನೆಗಳನ್ನು ನಡೆಸಿಕೊಂಡು ಬಂದಿದ್ದೇ ಕಾಂಗ್ರೆಸ್‌ ನಾಯಕರ ಸಾಧನೆಯಾಗಿದೆ. ಜನ
ತಮ್ಮನ್ನು ಮರೆತು ಬಿಡುತ್ತಾರೆ ಎನ್ನುವ ಕಾರಣಕ್ಕೆ ಗೋಹತ್ಯೆ ನಿಷೇಧ ವಾಪಸ್‌ ಮಾಡುವುದಾಗಿ ಹೇಳಿಕೊಂಡು ತಿರುಗಾಡುತ್ತಿದ್ದಾರೆ’ ಎಂದು ಸಚಿವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.