ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸಿರುವ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) 7 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.
ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ, ‘ಮೌಲಮುಲ್ಲ (ಆಳಂದ), ಮಹೇಶ್ ಕುಮಾರ್ ರಾಥೋಡ್ (ಜೇವರ್ಗಿ), ವೀರಣ್ಣ ಎಚ್. (ಕೂಡ್ಲಗಿ), ಗಿರೀಶ್ (ಶಿರಾ), ಜ್ಯೋತಿ ಬಸು (ಕೆಜಿಎಫ್) ವಿಧಾನಸಭೆಯ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಚಿಕ್ಕಮಗಳೂರು ಮತ್ತು ಮೂಡಿಗೆರೆ ಅಭ್ಯರ್ಥಿಗಳನ್ನು ಮುಂದಿನ ದಿನಗಳಲ್ಲಿ ಅಂತಿಮಗೊಳಿಸಲಾಗುವುದು’ ಎಂದು ಮಾಹಿತಿ ನೀಡಿದರು.
ಸದ್ಯ ವಿಧಾನಸಭೆಗೆ ಬಂಡವಾಳಶಾಹಿಗಳ, ಕಾರ್ಪೊರೇಟ್ ಸಂಸ್ಥೆಗಳ ಪರವಾದ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ವ್ಯಾಪಾರಿಗಳು ಗೆದ್ದು ಬರುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ರಾಜ್ಯದ ಜನರ ನೆಮ್ಮದಿ–ಶಾಂತಿ ಕೆಡಿಸುವ ಮತೀಯ ಸಂಘರ್ಷ ಉಂಟು ಮಾಡಿ ಚುನಾವಣೆ ಗೆಲ್ಲುವ ಮೂಲಕ ವಿಧಾನಸಭೆಯೊಳಗೆ ಇಂದು ಮೌಲ್ಯಾಧಾರಿತ, ಜನಪರ ಹೋರಾಟಗಾರರು ಕಡಿಮೆಯಾಗುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.