ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ, ಹಲವು ಯೋಜನೆಗಳಿಗೆ ಚಾಲನೆ ನೀಡುವ ನೆಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಇದೇ 27ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿದ್ದು, ಶಿವಮೊಗ್ಗ ಮತ್ತು ಬೆಳಗಾವಿಯಲ್ಲಿ ಮಿಂಚಿನ ಸಂಚಾರ ನಡೆಸಲಿದ್ದಾರೆ. ‘ಪಿಎಂ–ಕಿಸಾನ್ ಸಮ್ಮಾನ್’ ಯೋಜನೆಯ 13ನೇ ಕಂತಿನ ಹಣವನ್ನು ಅವರು ಬೆಳಗಾವಿಯಲ್ಲಿ ಬಿಡುಗಡೆ ಮಾಡಲಿದ್ದಾರೆ.
ಈ ಎರಡೂ ಜಿಲ್ಲೆಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳು, ರೈಲ್ವೆ, ರಸ್ತೆ ಯೋಜನೆಗಳು, ‘ಜಲಜೀವನ್ ಮಿಷನ್’ನಡಿ ಗ್ರಾಮೀಣ ನೀರು ಸಂಪರ್ಕ ಯೋಜನೆಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ತಮ್ಮ ಒಂದು ದಿನದ ಈ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ಚಾಲನೆ ನೀಡಲಿದ್ದಾರೆ.
ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಬರಲಿ ರುವ ಮೋದಿ, ಸುಮಾರು ₹ 450 ಕೋಟಿ ವೆಚ್ಚದಲ್ಲಿ ಹೊಸದಾಗಿ ನಿರ್ಮಿ ಸಿರುವ ವಿಮಾನ ನಿಲ್ದಾಣವನ್ನು ಉದ್ಘಾಟಿಸುವರು. ಬಳಿಕ, ₹990 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಲಿ ರುವ ಶಿವಮೊಗ್ಗ– ಶಿಕಾರಿಪುರ– ರಾಣೆ ಬೆನ್ನೂರು ಹೊಸ ರೈಲು ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೆ, ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ಇಲಾಖೆಗಳ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಬೆಳಗಾವಿಯಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಅನು ದಾನವನ್ನು ದೇಶದ ಸುಮಾರು 9 ಕೋಟಿ ಅರ್ಹ ರೈತರಿಗೆ ತಲಾ ₹ 2 ಸಾವಿರದಂತೆ ₹ 18 ಸಾವಿರ ಕೋಟಿಯನ್ನು ಡಿಬಿಟಿ ಮೂಲಕ ನೇರವಾಗಿ ಅವರು ಬಿಡುಗಡೆ ಮಾಡಲಿದ್ದಾರೆ. ಅಲ್ಲದೆ, ₹ 190 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬೆಳಗಾವಿ ರೈಲು ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿರುವ ಮೋದಿ, ಆರು ಬಹುಗ್ರಾಮ ಕುಡಿಯುವ ನೀರು ಯೋಜನೆಗಳಿಗೂ ಶಿಲಾನ್ಯಾಸ ಮಾಡಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.