ಗಂಗಾವತಿ: ಬಿಜೆಪಿಯಿಂದ ದೂರ ಸರಿದು, ತಮ್ಮದೇ ಆದ ರಾಜಕೀಯ ಸಾಮ್ರಾಜ್ಯ ಕಟ್ಟಿಕೊಳ್ಳಲು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್ಪಿಪಿ) ಸ್ಥಾಪಿಸಿದ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಇದೀಗ ಮರಳಿ ಬಿಜೆಪಿ ಸೇರಲಿದ್ದಾರೆ? ಎನ್ನುವ ಅನುಮಾನ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ.
ಜನಾರ್ದನ ರೆಡ್ಡಿ ಅವರು ಪಕ್ಷ ಸ್ಥಾಪಿಸಿ, ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಕ್ಷೇತ್ರಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ.
ಪಕ್ಷದ ಬಲವರ್ಧನೆಗಾಗಿ ವಿವಿಧ ಸಮಾಜಗಳ ಜೊತೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅತೃಪ್ತ ಮುಖಂಡರ, ಹಾಲಿ, ಮಾಜಿ ಸ್ಥಳೀಯ ಜನಪ್ರತಿನಿಧಿಗಳ ನಿವಾಸಕ್ಕೆ ಭೇಟಿ ನೀಡಲಾಗುತ್ತಿದೆ. ಇದರಿಂದ ಕೆಆರ್ಪಿಪಿಗೆ ಹೆಚ್ಚಿನ ಸಂಖ್ಯೆಯಲ್ಲಿ ರಾಷ್ಟ್ರೀಯ ಪಕ್ಷದ ಕಾರ್ಯಕರ್ತರು ಸೇರ್ಪಡೆ ಆಗುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ಕೆಲ ನಾಯಕರು ರೆಡ್ಡಿ ಅವರನ್ನು ಮರಳಿ ಬಿಜೆಪಿಗೆ ತರುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಅವರು ಬೆಂಗಳೂರು ಹಾಗೂ ದೆಹಲಿಯಲ್ಲಿ ಕೆಲ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ ಎನ್ನುವ ಮಾತು ಕೇಳಿಬರುತ್ತಿವೆ.
ನಿರಾಕರಣೆ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಸೇರಲ್ಲ. ಪಕ್ಷ ಬಲವಾಗಿ ಸಂಘಟನೆಗೊಳ್ಳುತ್ತಿದ್ದು, ರೆಡ್ಡಿ ಅವರು ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ’ ಎಂದು ಕೆಆರ್ಪಿಪಿ ಜಿಲ್ಲಾಧ್ಯಕ್ಷ ಮನೋಹರಗೌಡ ಹೇರೂರು ಪ್ರತಿಕ್ರಿಯಿಸಿದ್ದಾರೆ.
ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಹೇರೂರು, ‘ಜನಾರ್ದನರೆಡ್ಡಿ ಅವರನ್ನು ಬಿಜೆಪಿ ಹೈಕಮಾಂಡ್ ಮನವೊಲಿಸಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಚಟುವಟಿಕೆಯನ್ನು ಸ್ಥಗಿತಗೊಳಿಸುವ ಕುರಿತಾಗಿ ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮ ಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಇದೆಲ್ಲ ಊಹಾಪೋಹ ಹಾಗೂ ಸಂಪೂರ್ಣ ಸುಳ್ಳು ಮಾಹಿತಿ ಆಗಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.