
ಬೆಂಗಳೂರು: ‘ಅಬಕಾರಿ ಇಲಾಖೆಯಲ್ಲಿ ನಡೆದಿರುವ ₹6,000 ಕೋಟಿಗೂ ಅಧಿಕ ಮೊತ್ತದ ಹಗರಣದ ವಿರುದ್ಧ ಅಧಿವೇಶನದಲ್ಲಿ ಆರಂಭಿಸಿರುವ ಹೋರಾಟವನ್ನು ‘ಜನತಾ ನ್ಯಾಯಾಲಯ’ಕ್ಕೆ ತೆಗೆದುಕೊಂಡು ಹೋಗುತ್ತೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.
‘ಸಚಿವ ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆ ನೀಡಬೇಕು. ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದೆವು. ಆದರೆ, ಲೂಟಿಯಲ್ಲಿ ಹೈಕಮಾಂಡ್, ಮುಖ್ಯಮಂತ್ರಿ ಸೇರಿದಂತೆ ಎಲ್ಲರ ಪಾಲಿದೆ. ಕಳಂಕಿತ ಸಚಿವರ ಬೆಂಬಲಕ್ಕೆ ಇಡೀ ಸಚಿವ ಸಂಪುಟವೇ ನಿಂತಿದೆ. ಹಣವನ್ನು ನೆರೆ ರಾಜ್ಯಗಳ ಚುನಾವಣೆಗಳಿಗೆ ಬಳಕೆ ಮಾಡಲಾಗುತ್ತಿದೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
‘ಆರೋಪಕ್ಕೆ ಸಾಕ್ಷಿಯಾಗಿ ಹಿರಿಯ ಅಧಿಕಾರಿಗಳು ಭಾಗಿಯಾಗಿರುವ ಮೂರು ಆಡಿಯೊ ಸಂಭಾಷಣೆ, ಲೋಕಾಯುಕ್ತಕ್ಕೆ ಎರಡು, ರಾಜ್ಯಪಾಲರಿಗೆ ನೀಡಿದ್ದ ಒಂದು ದೂರು, ಲೋಕಾಯುಕ್ತರಿಗೆ ಸಿಕ್ಕಿಬಿದ್ದ ನಿಂಗಪ್ಪ ಎಂಬಾತ ನೀಡಿದ್ದ ಹೇಳಿಕೆ ಇವೆ. ಸಂವೇದನೆ ಇಲ್ಲದ ಈ ಸರ್ಕಾರ ಯಾವುದಕ್ಕೂ ಮಣಿಯಲಿಲ್ಲ. ರಾಜೀನಾಮೆ ಹಾಗೂ ತನಿಖೆಗೆ ಆಗ್ರಹಿಸಿ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು. ಕಾನೂನು ಹೋರಾಟ ಹಮ್ಮಿಕೊಳ್ಳುವ ಕುರಿತು ಚರ್ಚೆ ನಡೆಸಲಾಗುವುದು. ಕೆಲ ಪ್ರಮುಖ ಸಾಕ್ಷ್ಯಗಳು ಸಿಗುವ ಸೂಚನೆಗಳಿದ್ದು, ಸಾರ್ವಜನಿಕರ ಮುಂದೆ ಸರ್ಕಾರದ ಬಣ್ಣ ಬಯಲು ಮಾಡಲಾಗುವುದು’ ಎಂದಿದ್ದಾರೆ.
‘ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡವನ್ನು ಅಧಿವೇಶನದಲ್ಲಿ ಕಳಚಿ ಹಾಕುವಲ್ಲಿ ಯಶಸ್ವಿಯಾಗಿದ್ದೇವೆ. ಅಧಿಕಾರಕ್ಕೆ ಬಂದ ದಿನದಿಂದಲೂ ಹಗರಣಗಳ ಸುಳಿಯಲ್ಲೇ ಸರ್ಕಾರ ಸಿಲುಕಿಕೊಂಡಿದೆ. ಅಬಕಾರಿ ಇಲಾಖೆಯ ಹಗರಣ ಅವರ ಭ್ರಷ್ಟಾಚಾರದ ಪಟ್ಟಿಗೆ ಹೊಸ ಸೇರ್ಪಡೆ. ಹೇಳಿಕೊಳ್ಳಲು ಯಾವುದೇ ಅಭಿವೃದ್ಧಿ ಕಾರ್ಯಕ್ರಮ ಮಾಡಿಲ್ಲ. ಖಜಾನೆ ಖಾಲಿಯಾಗಿದೆ’ ಎಂದು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.