ADVERTISEMENT

ಕನ್ನಡ ಬಾವುಟಕ್ಕೆ ಬೆಂಕಿ | ಕನ್ನಡ ದ್ರೋಹಿಗಳಿಗೆ ತಕ್ಕಶಾಸ್ತಿ ಮಾಡಬೇಕು: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2021, 6:33 IST
Last Updated 16 ಡಿಸೆಂಬರ್ 2021, 6:33 IST
ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ   

ಬೆಂಗಳೂರು: ಮಹಾರಾಷ್ಟ್ರದ ‌ಕೊಲ್ಹಾಪುರ ದಲ್ಲಿ ಶಿವಸೇನಾ ಕಾರ್ಯಕರ್ತರು ಕರ್ನಾಟಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಕನ್ನಡ ಬಾವುಟವನ್ನು ಮಂಗಳವಾರ ಸುಟ್ಟು ಹಾಕಿದ್ದಾರೆ.

ಈ ಅವಮಾನಕರ ಘಟನೆಯನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಕನ್ನಡ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ, ತಪ್ಪಿತ್ತಸ್ಥರ ವಿರುದ್ಧ ರಾಜ್ಯ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಕನ್ನಡಕ್ಕಾಗಿ ಹೋರಾಡಿದವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

'ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ ವಿಚಾರದಲ್ಲಿ ಆಗಿರುವ ಅಪಚಾರ ಕ್ಷಮಾರ್ಹವಲ್ಲ' ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ADVERTISEMENT

'ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಇದನ್ನು ಕಿಡಿಗೇಡಿಗಳು ಅರ್ಥ ಮಾಡಿಕೊಳ್ಳಬೇಕಿತ್ತು. ಈ ಪರಮ ಕಿರಾತಕ ಕೃತ್ಯದ ವಿರುದ್ಧ ರಾಜ್ಯ ಸರಕಾರ ಅತ್ಯಂತ ಕಠಿಣವಾಗಿ ವರ್ತಿಸಬೇಕು. ನಮ್ಮ ಧ್ವಜವನ್ನು ಅಪಮಾನಿಸಿದ ಕನ್ನಡ ದ್ರೋಹಿಗಳಿಗೆ ತಕ್ಕಶಾಸ್ತಿ ಮಾಡಬೇಕು' ಎಂದು ಮನವಿ ಮಾಡಿದ್ದಾರೆ.

'ಕನ್ನಡ ದ್ರೋಹಿಗಳನ್ನು ಹಾಗೆಯೇ ಬಿಟ್ಟರೆ ಕರ್ನಾಟಕ ನಿಮ್ಮನ್ನು ಕ್ಷಮಿಸುವುದಿಲ್ಲ. ತಕ್ಷಣವೇ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಕ್ರಮ ವಹಿಸಬೇಕು ಹಾಗೂ ಕನ್ನಡಕ್ಕಾಗಿ ಹೋರಾಡಿದವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂಬುದು ನನ್ನ ಆಗ್ರಹ' ಎಂದು ಹೇಳಿದ್ದಾರೆ.

ವಿಧಾನಮಂಡಲ‌ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿಯವರು (ಎಂಇಎಸ್) ಇಲ್ಲಿ ಹಮ್ಮಿ ಕೊಂಡಿದ್ದ ‘ಮಹಾಮೇಳಾವ’ ಸಂದರ್ಭದಲ್ಲಿ, ಆ ಸಂಘಟನೆಯ ಅಧ್ಯಕ್ಷ ದೀಪಕ ದಳವಿ ಅವರಿಗೆ ಕನ್ನಡ ಪರ ಹೋರಾಟಗಾರ ಸಂಪತ್‌ಕುಮಾರ್‌ ದೇಸಾಯಿ ಮಸಿ‌ ಬಳಿದಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟು ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.