ADVERTISEMENT

ಬೇಡ್ತಿ–ವರದಾ ನದಿ ಜೋಡಣೆಗೆ ಡಿಪಿಆರ್: ರಾಜ್ಯ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2025, 16:05 IST
Last Updated 24 ಡಿಸೆಂಬರ್ 2025, 16:05 IST
   

ನವದೆಹಲಿ: ಕರ್ನಾಟಕದಲ್ಲಿ ಪರಿಸರಾಸಕ್ತರ ವ್ಯಾಪಕ ವಿರೋಧದ ನಡುವೆಯೂ ಬೇಡ್ತಿ–ವರದಾ ನದಿಗಳ ಜೋಡಣೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. 

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ನದಿ ಜೋಡಣೆಯ ವಿಶೇಷ ಸಮಿತಿ ಸಭೆಯಲ್ಲಿ ಬೇಡ್ತಿ–ವರದಾ ಜೋಡಣೆ ಬಗ್ಗೆ ಚರ್ಚೆಯಾಗಲಿದೆ. ಈ ನದಿಗಳ ಜೋಡಣೆಗೆ ಜಲಶಕ್ತಿ ಸಚಿವಾಲಯ ಡಿಪಿಆರ್ ತಯಾರಿಸಲಿದೆ. ಈ ಯೋಜನೆಗೆ ₹10 ಸಾವಿರ ಕೋಟಿ ವೆಚ್ಚ ಆಗಲಿದ್ದು, ಕೇಂದ್ರ ಸರ್ಕಾರ ₹9 ಸಾವಿರ ಕೋಟಿ ಭರಿಸಲಿದೆ’ ಎಂದು ಮಾಹಿತಿ ನೀಡಿದರು. 

ಈ ಯೋಜನೆಯು ಪಶ್ಚಿಮಕ್ಕೆ ಹರಿಯುವ ನದಿಗಳಿಂದ ರಾಜ್ಯದ ಪೂರ್ವ ಭಾಗದ ಬರ ಪೀಡಿತ ಭಾಗಗಳಿಗೆ ನೀರನ್ನು ಹರಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. 

ADVERTISEMENT

‘ಗೋದಾವರಿ–ಕಾವೇರಿ ನದಿಗಳ ಜೋಡಣೆ ಯೋಜನೆಯ ಮೊದಲ ಹಂತದಲ್ಲಿ 148 ಟಿಎಂಸಿ ಅಡಿ ನೀರನ್ನು ತಿರುಗಿಸಲು ಪ್ರಸ್ತಾಪಿಸಲಾಗಿದೆ. ಇದರಲ್ಲಿ ಕರ್ನಾಟಕಕ್ಕೆ ಕೇವಲ 15.90 ಟಿಎಂಸಿ ಅಡಿ ಹಂಚಿಕೆ ಮಾಡಲಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ, ಇತರ ಫಲಾನುಭವಿ ರಾಜ್ಯಗಳಿಗೆ ನೀರಾವರಿ ಸೇರಿದಂತೆ ವಿವಿಧ ಉದ್ದೇಶಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಹಂಚಿಕೆ ಮಾಡಲಾಗಿದೆ. ಬೇಡ್ತಿ-ವರದಾ ನದಿ ಜೋಡಣೆ ಬಳಿಕವೂ ರಾಜ್ಯಕ್ಕೆ ಸಿಗುವುದು ಕೇವಲ 34.40 ಟಿಎಂಸಿ ಅಡಿಗೆ ಮಾತ್ರ. ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ಅಡಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಹೆಚ್ಚುವರಿ 5 ಟಿಎಂಸಿ ಅಡಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ’ ಎಂದರು. 

ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ರಾಜ್ಯದ ಜನರಿಗೆ ಉಪಯೋಗವಾಗಲು ಕೇಂದ್ರ ಸರ್ಕಾರ ₹10 ಸಾವಿರ ಕೋಟಿ ಹಾಕಿ ರಾಜ್ಯದಿಂದ ₹1 ಸಾವಿರ ಕೋಟಿ ಕೇಳುತ್ತಿರುವಾಗ ನಾವು ಈ ಯೋಜನೆ ಬೇಡ ಎನ್ನಲು ಆಗುತ್ತದೆಯೇ? ಸಮುದ್ರಕ್ಕೆ ಹೋಗುವ ನೀರನ್ನು ಜನರ ಅನುಕೂಲಕ್ಕೆ ಬಳಸುವುದು ನಮ್ಮ ಉದ್ದೇಶ’ ಎಂದರು. 

ಬೆಂಗಳೂರಿನಲ್ಲಿ ಪ್ರಾದೇಶಿಕ ಕ್ಷಿಪ್ರ ಸಂಚಾರ ವ್ಯವಸ್ಥೆಗೆ ಮನವಿ ಮಾಡಲಾಗಿದೆ. ಬಿಡದಿ- ಮೈಸೂರು, ಹಾರೋಹಳ್ಳಿ- ಕನಕಪುರ, ನೆಲಮಂಗಲ- ತುಮಕೂರು, ವಿಮಾನ ನಿಲ್ದಾಣ- ಚಿಕ್ಕಬಳ್ಳಾಪುರ, ಹೊಸಕೋಟೆ- ಕೋಲಾರ ಮಧ್ಯೆ ಈ ಸಂಚಾರ ವ್ಯವಸ್ಥೆ ನಿರ್ಮಿಸಲು ಡಿಪಿಆರ್ ತಯಾರಿಸಲು ಮನವಿ ಮಾಡಿದ್ದೇವೆ. ಬೆಂಗಳೂರಿನ ದಟ್ಟಣೆ ಹಾಗೂ ಒತ್ತಡ ಕಡಿಮೆ ಮಾಡಲು ಈ ಭಾಗದಲ್ಲಿ ಸ್ಯಾಟಲೈಟ್ ಟೌನ್ ನಿರ್ಮಿಸಬೇಕು ಎಂದು ಈ ಯೋಜನೆಗೆ ಮನವಿ ಮಾಡಿದ್ದು, ಇದನ್ನು ಪರಿಗಣಿಸುವುದಾಗಿ ಕೇಂದ್ರ ನಗರಾಭಿವೃದ್ಧಿ ಸಚಿವರು ಭರವಸೆ ನೀಡಿದ್ದಾರೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.