ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಹಲವಾರು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇಂದು ಆದೇಶ ಪ್ರಕಟಿಸಿದೆ.
ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು.
ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿಲಾಗಿದೆ. ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಲಾಗಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17ರಷ್ಟು ಮೀಸಲಾತಿಯನ್ನು ಪ್ರವರ್ಗ- ಎರಲ್ಲಿನ ಸಮುದಾಯಗಳಿಗೆ ಶೇಕಡ 6ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6ರಷ್ಟು ಮತ್ತು ಪ್ರವರ್ಗ - ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿತ್ತು.
ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು. ಆದರೆ, ಹಲವಾರು ಜನಪ್ರತಿನಿದಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದರು.
ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿ, 2025ರ ಸೆಪ್ಟೆಂಬರ್ 6ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ. ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 2027ರ ಡಿಸೆಂಬರ್ 31ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು) ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.