ADVERTISEMENT

40 ಪರ್ಸೆಂಟ್‌ ಕಮಿಷನ್‌ ಆರೋಪ: ದಾಖಲೆಯೊಂದಿಗೆ ದೂರು ನೀಡಿದರೆ ಕ್ರಮ ಎಂದ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2022, 8:54 IST
Last Updated 24 ಆಗಸ್ಟ್ 2022, 8:54 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾಮಗಾರಿ ಕೈಗೊಳ್ಳುವ ಗುತ್ತಿಗೆದಾರರಿಂದ ಶೇಕಡ 40ರಷ್ಟು ಲಂಚ ಪಡೆಯಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳೊಂದಿಗೆ ದೂರು ನೀಡಿದರೆ ತನಿಖೆ ನಡೆಸಿ, ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿವಿಧ ಇಲಾಖೆಗಳಲ್ಲಿ ಲಂಚದ ಹಾವಳಿ ನಿಂತಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಮತ್ತೆ ಆರೋಪ ಮಾಡಿರುವ ಕುರಿತು ಸುದ್ದಿಗಾರರಿಗೆ ಬುಧವಾರ ಪ್ರತಿಕ್ರಿಯಿಸಿದ ಅವರು, 'ಸುಮ್ಮನೆ ಆರೋಪ ಮಾಡಿದರೆ ಸಾಲದು. ದಾಖಲೆಸಹಿತ ಅವರು ದೂರು ಕೊಡಲಿ' ಎಂದರು.

'ಗುತ್ತಿಗೆದಾರರ ಸಂಘದ ಅಧ್ಯಕ್ಷರು ಹಿಂದೆಯೂ ಆರೋಪ ಮಾಡಿದ್ದರು. ಪ್ರಧಾನಿಯವರಿಗೂ ಪತ್ರ ಬರೆದಿದ್ದರು. ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜತೆ ಸಭೆ ನಡೆಸಿ ಅವರ ಅಹವಾಲು ಆಲಿಸಿದ್ದೆ. ಅವರ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮಗಳನ್ನೂ ಕೈಗೊಂಡಿದ್ದೇನೆ' ಎಂದರು.

ADVERTISEMENT

ಯಾವುದೇ ಆರೋಪ ಮಾಡಿದರೂ ಆಧಾರಗಳನ್ನು ಒದಗಿಸಬೇಕು. ದಾಖಲೆಗಳನ್ನು ನೀಡದೇ ಆರೋಪ ಮಾಡಿದರೆ ಕ್ರಮ ಜರುಗಿಸಲು ಹೇಗೆ ಸಾಧ್ಯ ಎಂದು ಮುಖ್ಯಮಂತ್ರಿ ಕೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.