ಬೆಂಗಳೂರು: 'ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, 'ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ' ಎಂದು ಭರವಸೆ ನೀಡಿದ್ದಾರೆ.
'ಕೊರೊನಾ ಕಾಲದ ನಂತರದಿಂದ ಎಳೆಯ ವಯಸ್ಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು' ಎಂದು ಹೇಳಿದ್ದಾರೆ.
'ಇಂತಹ ಸಂದರ್ಭದಲ್ಲಿ ಈ ಸಮಸ್ಯೆಯ ಬಗ್ಗೆ ಗಮನ ಸೆಳೆದು, ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯಿತು. ಅವರಿಗೆ ಕೃತಜ್ಞತೆಗಳು' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.