
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ 2027ರ ಡಿ. 31ರವರೆಗೆ ಹೊರಡಿಸುವ ಅಧಿಸೂಚನೆಗಳಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಐದು ವರ್ಷಗಳಿಗೆ ಸಡಿಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
‘ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಂಡಿಸಿದ ಈ ಪ್ರಸ್ತಾವಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ’ ಎಂದು ಮೂಲಗಳು ತಿಳಿಸಿವೆ.
‘ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಯೂ ಸೇರಿದಂತೆ ನಾನಾ ಕಾರಣಗಳಿಂದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬವಾಗುತ್ತಿದೆ. ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಮೂಲಗಳು ಹೇಳಿವೆ.
22 ಮಠಗಳಿಗೆ ಭೂಮಿ: ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ರಾವುತ್ತನಹಳ್ಳಿ ಗ್ರಾಮದಲ್ಲಿ ದಲಿತ ಹಾಗೂ ಹಿಂದುಳಿದ ವರ್ಗಗಳ 22 ಮಠಗಳಿಗೆ ಭೂಮಿ ಮಂಜೂರು ಮಾಡಲು ಕೂಡಾ ಸಂಪುಟ ಒಪ್ಪಿಗೆ ನೀಡಿದೆ.
ರಾಷ್ಟ್ರೀಯ ಸಾಫ್ಟ್ವೇರ್ ಮತ್ತು ಸೇವಾ ಸಂಸ್ಥೆಯ ಒಕ್ಕೂಟದ (ನಾಸ್ಕಾಂ) ಸಹಭಾಗಿತ್ವದಲ್ಲಿ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿರುವ ಕಿಯೋನಿಕ್ಸ್ ತಾಣದಲ್ಲಿ ನಾಲ್ಕು ವರ್ಷಗಳಲ್ಲಿ ಒಟ್ಟು ₹20 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಈ ಕೇಂದ್ರ ಸ್ಥಾಪನೆ ಆಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.