ಕಾವೇರಿ ನದಿ
ನವದೆಹಲಿ: ಕಾವೇರಿ ಕಣಿವೆಯ ನಾಲ್ಕು ಜಲಾಶಯಗಳು ಭರ್ತಿಯಾದ ಬಳಿಕವಷ್ಟೇ ಕರ್ನಾಟಕ ಸರ್ಕಾರವು ತಮಿಳುನಾಡಿಗೆ ಕಾವೇರಿ ನೀರು ಹರಿಸಿದೆ ಎಂದು ತಮಿಳುನಾಡು ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.
ನವದೆಹಲಿಯಲ್ಲಿ ಮಂಗಳವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ವಾದ ಮಂಡಿಸಿದ ತಮಿಳುನಾಡು ಸರ್ಕಾರದ ಪ್ರತಿನಿಧಿಗಳು, ಕಾವೇರಿ ನ್ಯಾಯಮಂಡಳಿ 1992ರಲ್ಲಿ ನೀಡಿರುವ ಆದೇಶದ ಪ್ರಕಾರ, ಒಂದು ವಾರದಲ್ಲಿ ಹರಿಸಬೇಕಾದ ನೀರಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ, ಅದನ್ನು ಮುಂಬರುವ ವಾರಗಳಲ್ಲಿ ಹರಿಸತಕ್ಕದ್ದು. ಹಾಗಾಗಿ, ಕರ್ನಾಟಕ ರಾಜ್ಯವು ತನ್ನ ಜಲಾಶಯಗಳು ಭರ್ತಿ ಆಗುವ ತನಕ ಹೆಚ್ಚುವರಿ ನೀರನ್ನು ಹರಿಸಲು ಕಾಯುವ ಹಾಗಿಲ್ಲ’ ಎಂದರು.
ಕರ್ನಾಟಕ ಸರ್ಕಾರದ ಪ್ರತಿನಿಧಿಗಳು, ‘ಕಾವೇರಿ ನ್ಯಾಯಮಂಡಳಿ ಆದೇಶದ ಪ್ರಕಾರ ಈ ವರ್ಷ ಇಲ್ಲಿಯವರೆಗೆ ತಮಿಳುನಾಡಿಗೆ 56.76 ಟಿಎಂಸಿ ಅಡಿ ನೀರು ಹರಿಸಬೇಕಿತ್ತು. ಆದರೆ, ಆಗಸ್ಟ್ 11ರ ವರೆಗೆ 153 ಟಿಎಂಸಿ ಅಡಿ ನೀರು ಬಿಡಲಾಗಿದೆ. ಬಿಳಿಗುಂಡ್ಲುವಿನಲ್ಲಿ ಹರಿದ ಹೆಚ್ಚುವರಿ ನೀರಿನ ಪ್ರಮಾಣವನ್ನು ಮುಂಬರುವ ತಿಂಗಳುಗಳಲ್ಲಿ ಕರ್ನಾಟಕವು ಹರಿಸಬೇಕಾದ ನೀರಿನ ಮೊತ್ತಕ್ಕೆ ಜಮೆ ಮಾಡಿಕೊಳ್ಳತಕ್ಕದ್ದು’ ಎಂದು ಸ್ಪಷ್ಟಪಡಿಸಿದರು.
ಮುಂಗಾರಿನ ಉಳಿದ ತಿಂಗಳುಗಳಲ್ಲಿ ಸಹ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಇದರಿಂದಾಗಿ, ಎರಡೂ ರಾಜ್ಯಗಳ ರೈತರಿಗೆ ಅನುಕೂಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹೆಚ್ಚುವರಿ ನೀರನ್ನು ರಾಜ್ಯ ಹರಿಸಿರುವುದರಿಂದ ಸಮಿತಿಯು ರಾಜ್ಯಕ್ಕೆ ಯಾವುದೇ ನಿರ್ದೇಶನ ನೀಡಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.