ಬೆಂಗಳೂರು: ‘ನಾರಾಯಣ ಗುರು ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಘೋಷಣೆಯಾಗಿದ್ದು, ನಿಗಮಕ್ಕೆ ₹500 ಕೋಟಿ ಅನುದಾನ ನೀಡಬೇಕು’ ಎಂದು ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
ಸಂಘದ ಅಧ್ಯಕ್ಷ ಎಂ.ತಿಮ್ಮೇಗೌಡ ಹಾಗೂ ಆರ್ಯ ಈಡಿಗರ ಮಹಾಸಂಸ್ಥಾನ ಮಠದ ವಿಖ್ಯಾತಾನಂದ ಸ್ವಾಮೀಜಿ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳಿದ್ದ ನಿಯೋಗವು, ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
26 ಉಪಜಾತಿಗಳನ್ನು ಒಳಗೊಂಡಿರುವ ಈಡಿಗ ಸಮುದಾಯದ 45 ಲಕ್ಷಕ್ಕಿಂತಲೂ ಹೆಚ್ಚು ಜನರು ರಾಜ್ಯದಲ್ಲಿದ್ದಾರೆ. ಸಮುದಾಯವು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಮತ್ತು ರಾಜಕೀಯವಾಗಿ ಹಿಂದುಳಿದಿದೆ. ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಮನವಿಯಲ್ಲಿ ಕೋರಿದ್ದಾರೆ.
ಶರಾವತಿ ಮುಳುಗಡೆಯಲ್ಲಿ ಜಮೀನು ಕಳೆದುಕೊಂಡ ಸಮುದಾಯದ ರೈತರಿಗೆ ಬಗರ್ಹುಕುಂ ಸಾಗುವಳಿ ಹಕ್ಕುಪತ್ರಗಳನ್ನು ನೀಡಬೇಕು. ಸಿಗಂದೂರು ದೇವಸ್ಥಾನದ 15 ಎಕರೆ ಜಮೀನನ್ನು ಸಮದಾಯದ ಜನರಿಗೆ ಮಂಜೂರು ಮಾಡಿ, ಹಕ್ಕು ಪತ್ರ ನೀಡಬೇಕು.
ಸಮುದಾಯವನ್ನು ಶೈಕ್ಷಣಿಕವಾಗಿ ಮುಂದೆ ತರಲು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಶಾಲಾ–ಕಾಲೇಜು ಮತ್ತು ವಿದ್ಯಾರ್ಥಿನಿಲಯ ಸ್ಥಾಪಿಸಬೇಕು. ವೃತ್ತಿಪರ ತರಬೇತಿ ಕೇಂದ್ರ, ಸಂಶೋಧನಾ ಕೇಂದ್ರ ಸ್ಥಾಪಿಸಲು ಸೋಲೂರಿನಲ್ಲಿ 20 ಎಕರೆ ಜಮೀನು ಹಂಚಿಕೆ ಮಾಡಬೇಕು. ನಗರದ ಸರ್.ಎಂ.ವಿ ಬಡಾವಣೆಯಲ್ಲಿ ಈಗಾಗಲೇ ನಿರ್ಮಾಣವಾಗುತ್ತಿರುವ ಸಮುದಾಯ ಭವನಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.