
ಬೆಂಗಳೂರು: ‘ರಾಜಕೀಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಕವಾಗಿರಬೇಕೆ ಹೊರತು, ಸಾರ್ವಜನಿಕ ಹಿತಾಸಕ್ತಿಗಳಲ್ಲಿ ರಾಜಕೀಯ ಮಾಡುವುದು ತರವಲ್ಲ’ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಕಿವಿಮಾತು ಹೇಳಿದೆ.
‘ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಜನೌಷಧಿ ಕೇಂದ್ರಗಳ ಹಂಚಿಕೆಯನ್ನು ಸ್ಥಗಿತಗೊಳಿಸಬೇಕು’ ಎಂಬ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿರುವ ಪ್ರಕರಣದಲ್ಲಿನ ತೀರ್ಪಿನಲ್ಲಿ ಈ ಅಂಶವನ್ನು ಉಲ್ಲೇಖಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, 'ಸಾರ್ವಜನಿಕ ಹಿತಾಸಕ್ತಿ ಎಂಬುದು ಆಡಳಿತದ ಆತ್ಮವಾಗಿರಬೇಕು’ ಎಂದು ನುಡಿದಿದೆ.
‘ಜನೌಷಧಿ ಕೇಂದ್ರಗಳು ಸಾರ್ವಜನಿಕ ಹಿತಾಸಕ್ತಿಯ ಕೇಂದ್ರಗಳು. ಕೇಂದ್ರ ಸರ್ಕಾರದ ಯೋಜನೆಯೊಂದು ಸುಗಮವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ಅದರ ತಲೆಯ ಮೇಲೆ ಸುತ್ತಿಗೆಯಿಂದ ಬಾರಿಸುವಂತಹ ಕೆಲಸಕ್ಕೆ ರಾಜ್ಯ ಸರ್ಕಾರ ಅಡಿಯಿಡಬಾರದು. ಅಷ್ಟಕ್ಕೂ ಇಂತಹ ಕೇಂದ್ರಗಳು ಹೇಗೆ ಹಾನಿಕಾರಕವಾಗಿವೆ ಎಂಬುದನ್ನು ವಿಶದಪಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ’ ಎಂದು ನ್ಯಾಯಪೀಠ ತನ್ನ 80 ಪುಟಗಳ ಸುದೀರ್ಘ ತೀರ್ಪಿನಲ್ಲಿ ವಿವರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.