
ಬೆಂಗಳೂರು: ‘ಪ್ರವರ್ಗ 2-ಎ (ಹಿಂದುಳಿದ ವರ್ಗ) ಅಡಿಯಲ್ಲಿ ಪೋಷಕರ ವಾರ್ಷಿಕ ಆದಾಯ ನಿಗದಿತ ಮಿತಿಯನ್ನು ದಾಟಿದ್ದರೆ ಅಭ್ಯರ್ಥಿಯು ಕೆನೆ ಪದರ ವ್ಯಾಪ್ತಿಗೆ ಒಳಪಡುತ್ತಾರೆ. ಹಾಗಾಗಿ, ಅವರು ಮೀಸಲಾತಿ ಪತ್ರ ಪಡೆಯಲು ಅನರ್ಹರಾಗುತ್ತಾರೆ’ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಾತಿ, ಆದಾಯ ಪರಿಶೀಲನಾ ಮೇಲ್ಮನವಿ ಪ್ರಾಧಿಕಾರ ಮತ್ತು ಧಾರವಾಡ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿ ಅಧ್ಯಕ್ಷರು ಸಲ್ಲಿಸಿದ್ದ ರಿಟ್ ಮೇಲ್ಮನವಿ ಮತ್ತು ನ್ಯಾಯಾಂಗ ನಿಂದನಾ ಅರ್ಜಿಗಳ (ಡಬ್ಲ್ಯು.ಎ 301/2025 ಜಿ–ಎಂ ಸಿಸಿ ಮತ್ತು ಸಿಸಿಪಿ 74/2025) ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
ಸರ್ಕಾರದ ಪರ ವಾದ ಮಂಡಿಸಿದ್ದ ನಮಿತಾ ಮಹೇಶ್ ಅವರ ವಾದವನ್ನು ಮನ್ನಿಸಿರುವ ನ್ಯಾಯಪೀಠ, ‘ಅಭ್ಯರ್ಥಿಯ ಪೋಷಕರ ಸಂಬಳವೂ ಸೇರಿದಂತೆ ಎಲ್ಲ ಮೂಲಗಳ ಆದಾಯವನ್ನು ಪರಿಗಣಿಸಬೇಕು. ಒಂದು ವೇಳೆ ಆದಾಯವು ನಿಗದಿತ ಮಿತಿಯನ್ನು ದಾಟಿದ್ದರೆ, ಆದಾಯ ತೆರಿಗೆ ಪಾವತಿದಾರ ಆಗಿದ್ದರೆ ಆಗ ಆತನಿಗೆ ಕೆನೆ ಪದರ ನಿಯಮ ಅನ್ವಯ ಆಗುತ್ತದೆ ಮತ್ತು ಅಭ್ಯರ್ಥಿಯು ಪ್ರವರ್ಗ 2-ಎ ಅಡಿ ಮೀಸಲಾತಿಯ ಅಧಿಕಾರ ಹೊಂದುವ ಬೇಡಿಕೆ ಸಲ್ಲಿಸಲು ಅವಕಾಶ ಹೊಂದಿರುವುದಿಲ್ಲ’ ಎಂದು ತೀರ್ಪಿನಲ್ಲಿ ವಿವರಿಸಿದೆ.
ಪ್ರಕರಣವೇನು?: ಕೆಪಿಟಿಸಿಎಲ್ ಸಹಾಯಕ ಎಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಧಾರವಾಡದ ರಾಘವೇಂದ್ರ ಫಕ್ಕೀರಪ್ಪ ಚಂದ್ರಣ್ಣನವರ ಪ್ರವರ್ಗ 2-ಎ (ಕುರುಬ ಜಾತಿ) ಅಡಿ ಆಯ್ಕೆಯಾಗಿದ್ದರು. ಅದರಂತೆ ಮೀಸಲಾತಿ ಪತ್ರಕ್ಕಾಗಿ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನೆ ಸಮಿತಿಗೆ ಅರ್ಜಿ ಸಲ್ಲಿಸಿದ್ದರು.
ಸಮಿತಿಯು, ‘ಅಭ್ಯರ್ಥಿಯ ಪೋಷಕರ ಆದಾಯವು ಪ್ರವರ್ಗ-2ಎಗೆ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯಾದ ₹8 ಲಕ್ಷ ಮೀರುತ್ತಿರುವ ಕಾರಣ ಅವರು ಹಿಂದುಳಿದ ವರ್ಗಗಳಡಿ ಮೀಸಲಾತಿ ಪಡೆಯಲು ಅರ್ಹರಲ್ಲ’ ಎಂದು ಆದೇಶಿಸಿತ್ತು.
ಇದನ್ನು ಪ್ರಶ್ನಿಸಿ ರಾಘವೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ 2024ರ ಅಕ್ಟೋಬರ್ನಲ್ಲಿ, ‘ಅಭ್ಯರ್ಥಿಯು ಮೀಸಲಾತಿ ಸೌಲಭ್ಯ ಪಡೆಯಲು ಅರ್ಹ’ ಎಂದು ತೀರ್ಪು ನೀಡಿತ್ತು. ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಸರ್ಕಾರ ವಿಭಾಗೀಯ ನ್ಯಾಯಪೀಠದಲ್ಲಿ ಪ್ರಶ್ನಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.