ADVERTISEMENT

ಬೈಕ್‌ ಟ್ಯಾಕ್ಸಿ ಚಾಲಕರಿಗೆ ಕಿರುಕುಳ ನೀಡಬೇಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 16:05 IST
Last Updated 22 ಆಗಸ್ಟ್ 2025, 16:05 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ವ್ಯಕ್ತಿಗಳಿಗೆ ಕಿರುಕುಳ ನೀಡಬಾರದು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಮೌಖಿಕ ನಿರ್ದೇಶನ ನೀಡಿದೆ.

ಬೈಕ್ ಟ್ಯಾಕ್ಸಿ ಸೇವೆಗೆ ಸಂಬಂಧಿಸಿದಂತೆ ‘ಎಎನ್‌ಐ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ (ಓಲಾ)’ ಕಂ‍ಪನಿ ಸಲ್ಲಿಸಿರುವ ಮೇಲ್ಮನವಿಯ ಈ ಹಿಂದಿನ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ, ಸರ್ಕಾರ ಈ ಕುರಿತಂತೆ ತನ್ನ ನಿಲುವು ತಿಳಿಸಲು ಗಡುವು ವಿಧಿಸಿತ್ತು. ಅಂತೆಯೇ, ‘ಬೈಕ್ ಟ್ಯಾಕ್ಸಿ ಸೇವೆಗೆ ಶಾಸನಬದ್ಧ ಅನುಮತಿ ಇರುವಾಗ ರಾಜ್ಯ ಸರ್ಕಾರ ಇದಕ್ಕೆ ಸಂಪೂರ್ಣ ನಿಷೇಧ ಹೇರುವುದು ತರವಲ್ಲ ಮತ್ತು ಸದ್ಯ ಹೇರಲಾಗಿರುವ ನಿಷೇಧವನ್ನು ಅನಿರ್ದಿಷ್ಟ ಅವಧಿಗೆ ಮುಂದುವರಿಸಲೂ ಸಾಧ್ಯವಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಈ ಅಭಿಪ್ರಾಯವನ್ನೇ ಅನುಮತಿ ಎಂದು ಭಾವಿಸಿದ ಅಗ್ರಿಗೇಟರ್‌ಗಳು ಗುರುವಾರದಿಂದ (ಆ.21) ತಮ್ಮ ಸೇವೆಯನ್ನು ಪುನರಾರಂಭಿಸಿದ್ದವು. ಈ ಕಾರಣದಿಂದ ಅಡ್ವೊಕೇಟ್‌ ಜನರಲ್ ಕೆ.ಶಶಿಕಿರಣ್‌ ಶೆಟ್ಟಿ ಅವರು ಶುಕ್ರವಾರ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಹಾಜರಾಗಿ ಈ ವಿಷಯವನ್ನು ಕೋರ್ಟ್‌ ಗಮನಕ್ಕೆ ತಂದರು.

ADVERTISEMENT

‘ಅಪ್ಲಿಕೇಶನ್‌ ಆಧಾರಿತ ಬೈಕ್‌ ಟ್ಯಾಕ್ಸಿ ಸೇವೆ ನೀಡುವವರು ತಮ್ಮ ಸೇವೆಯನ್ನು ಆರಂಭಿಸಿದ್ದಾರೆ. ಹೀಗಾಗಿ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗುವುದ‌ಕ್ಕೂ ಮುನ್ನ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರುವುದು ನನ್ನ ಕರ್ತವ್ಯವಾಗಿದೆ’ ಎಂದು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ‘ಕೋರ್ಟ್‌ ಈ ಸಂಬಂಧ ಯಾವುದೇ ಆದೇಶ ನೀಡಿಲ್ಲ. ಸರ್ಕಾರ ಏನು ಕ್ರಮ ತೆಗೆದುಕೊಳ್ಳಬೇಕು ಎಂದುಕೊಂಡಿದೆಯೋ ಅದನ್ನು ತೆಗೆದುಕೊಳ್ಳಬಹುದು. ಆದರೆ, ವ್ಯಕ್ತಿಗತವಾಗಿ ಬೈಕ್‌ ಟ್ಯಾಕ್ಸಿ ಓಡಿಸುವವರ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವುದು ಬೇಡ’ ಎಂದು ಮೌಖಿಕವಾಗಿ ನುಡಿಯಿತು.

‘ಅಗ್ರಿಗೇಟರ್ಸ್‌ಗೆ ಸಂಬಂಧಿಸಿದಂತೆ ಸರ್ಕಾರ ನೀತಿ ರೂಪಿಸುವುದನ್ನು ಹೈಕೋರ್ಟ್‌ ಪರಿಗಣಿಸಲಿರುವ ಕಾರಣದಿಂದ ವ್ಯಕ್ತಿಗತವಾಗಿ ಬೈಕ್‌ ಟ್ಯಾಕ್ಸಿ ಓಡಿಸುವವರ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಆದ್ದರಿಂದ, ವ್ಯಕ್ತಿಗತವಾಗಿ ಬೈಕ್‌ ಟ್ಯಾಕ್ಸಿ ಚಲಾಯಿಸುವವರಿಗೆ ಕಿರುಕುಳ ನೀಡಬೇಡಿ’ ಎಂದು ಸರ್ಕಾರಕ್ಕೆ ಸೂಚಿಸಿತು.

‘ಬೈಕ್‌ ಟ್ಯಾಕ್ಸಿ ಚಾಲಕರ ಕಲ್ಯಾಣ ಸಂಘ’ದ ಪರವಾಗಿ ಹಾಜರಾಗಿದ್ದ ಹೈಕೋರ್ಟ್‌ ವಕೀಲ ಗಿರೀಶ್‌ ಕುಮಾರ್ ‘ಸರ್ಕಾರ ಅಪ್ಲಿಕೇಶನ್‌ ವಿರುದ್ಧ ಕ್ರಮ ಕೈಗೊಳ್ಳಬಹುದು. ಆದರೆ, ಅಪ್ಲಿಕೇಶನ್‌ ಆಧರಿಸಿ ಸೇವೆ ನೀಡುವ ಟ್ಯಾಕ್ಸಿಗಳ ಮೇಲಲ್ಲ’ ಎಂದರು. ಅಂತೆಯೇ, ‘ವ್ಯಕ್ತಿಗತವಾಗಿ ಓಡಿಸುತ್ತಿರುವವರ ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದೂ ದೂರಿದರು.

ಇದನ್ನು ಅಲ್ಲಗಳೆದ ಶಶಿಕಿರಣ ಶೆಟ್ಟಿ ಅವರು, ‘ವ್ಯಕ್ತಿಗತ ಬೈಕ್‌ ಟ್ಯಾಕ್ಸಿ ಸೇವೆ ನೀಡುವವರನ್ನು ಬಂಧಿಸಿಲ್ಲ. ಈ ಆರೋಪ ಸರಿಯಲ್ಲ. ಅವರನ್ನು ನಾವು ಬಂಧಿಸುವುದಿಲ್ಲ’ ಎಂದು ನ್ಯಾಯಪೀಠಕ್ಕೆ ಸ್ಪಷ್ಟಪಡಿಸಿದರು. 

ನ್ಯಾಯಾಂಗ ನಿಂದನೆ ಕೈಬಿಟ್ಟ ಹೈಕೋರ್ಟ್‌

‘ಸರ್ಕಾರಿ ಕೋಟಾದಡಿ ವೈದ್ಯ ಪದವಿ (ಎಂಬಿಬಿಎಸ್) ಪೂರೈಸಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಉನ್ನತ ಶಿಕ್ಷಣ ಪಡೆಯುವ ಸಲುವಾಗಿ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸರ್ಕಾರ ಪಾಲನೆ ಮಾಡಿಲ್ಲ’ ಎಂಬ ಆರೋಪದಡಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಹಾಗೂ ಆಯುಕ್ತ ಕೆ.ಬಿ.ಶಿವಕುಮಾರ್ ವಿರುದ್ಧ ದಾಖಲಿಸಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಹೈಕೋರ್ಟ್ ಕೈಬಿಟ್ಟಿದೆ.

ಈ ಸಂಬಂಧ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಬಾಚಿಗೊಂಡನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್‌ಸಿ) ಜನರಲ್‌ ಡ್ಯೂಟಿ ಮೆಡಿಕಲ್‌ ಆಫೀಸರ್‌ (ಜಿಡಿಎಂಒ) ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಎಂ.ಶಿವರಾಜ್‌ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬುಗೆರೆ ಪಿಎಚ್‌ಸಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಎಸ್‌.ಪೂರ್ಣಿಮಾ ಸೇರಿದಂತೆ ರಾಜ್ಯದ ವಿವಿಧೆಡೆ ಕಾರ್ಯ ನಿರ್ವಹಿಸುತ್ತಿರುವ ಒಟ್ಟು 22 ವೈದ್ಯರು ಸಲ್ಲಿಸಿದ್ದ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ‘ಅರ್ಜಿದಾರ ವೈದ್ಯರನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಏಕಸದಸ್ಯ ನ್ಯಾಯಪೀಠ ಹೊರಡಿಸಿರುವ ಆದೇಶವನ್ನು ಪಾಲನೆ ಮಾಡಲಾಗಿದೆ’ ಎಂದು ತಿಳಿಸಿದರು. ಈ ಕುರಿತ ಸರ್ಕಾರದ ಆದೇಶ ಪ್ರತಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಹರ್ಷ ಗುಪ್ತ ಹಾಗೂ ಕೆ.ಬಿ.ಶಿವಕುಮಾರ್‌ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಟ್ಟು ಅರ್ಜಿ ವಿಲೇವಾರಿ ಮಾಡಿತು.

‘ಉನ್ನತ ವ್ಯಾಸಂಗಕ್ಕಾಗಿ ನಮ್ಮನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ 2025ರ ಜೂನ್ 24ರಂದು ಹೊರಡಿಸಿದ್ದ ಆದೇಶವನ್ನು ಆರೋಗ್ಯ ಇಲಾಖೆ ಪಾಲಿಸಿಲ್ಲ’ ಎಂದು ಅರ್ಜಿದಾರರು ಆರೋಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.