ಬೆಂಗಳೂರು: ‘ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ನನ್ನನ್ನು ಅಮಾನತುಗೊಳಿಸಿರುವ ವಿಧಾನಸಭೆ ವಿಶೇಷ ಮಂಡಳಿಯ ಆದೇಶಕ್ಕೆ ತಡೆ ನೀಡಬೇಕು’ ಎಂದು ಕೋರಿ ಎಸ್.ಮೂರ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಈ ಕುರಿತಂತೆ ಎಸ್.ಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ಮೇಲಿನ ಕಾಯ್ದಿರಿಸಿದ್ದ ತೀರ್ಪನ್ನು ಮುಖ್ಯ ನ್ಯಾಯ ಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಪ್ರಕಟಿಸಿದೆ.
‘ವಿಧಾನಸಭಾಧ್ಯಕ್ಷರು ತಮ್ಮ ವಿವೇಚನೆಯಡಿ ಅಮಾನತು ಆದೇಶ ಹೊರಡಿಸಿದ್ದಾರೆ. ಅರ್ಜಿದಾರರ ಅಹವಾಲು ಆಲಿಸಿಲ್ಲ’ ಎಂದು ಮೂರ್ತಿ ಪ್ರತಿಪಾದಿಸಿದ್ದರು.
ಪ್ರತಿವಾದ ಮಂಡಿಸಿದ್ದ ಎ.ಜಿ ಪ್ರಭುಲಿಂಗ ಕೆ.ನಾವದಗಿ, ‘ಅಮಾನತು ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸಭಾಧ್ಯಕ್ಷರು, ಸಮಿತಿ ಮುಂದೆ ಪ್ರಸ್ತಾವನೆ ಮಂಡಿಸಿ, ಅದರನ್ವಯ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಹಾಗಾಗಿ, ಏಕಸದಸ್ಯ ನ್ಯಾಯಪೀಠದ ಆದೇಶ ನ್ಯಾಯೋಚಿತವಾಗಿದೆ’ ಎಂದು ಪ್ರತಿಪಾದಿಸಿದ್ದರು. ಇದೀಗ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ವಿಭಾಗೀಯ ನ್ಯಾಯಪೀಠವು ಎತ್ತಿ ಹಿಡಿದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.