ADVERTISEMENT

ಹಿಜಾಬ್‌ ನಿರ್ಬಂಧ: ಹೈಕೋರ್ಟ್ ಮಹತ್ವದ ತೀರ್ಪು, ಸರ್ಕಾರದ ನಿಲುವಿಗೆ ಆನೆಬಲ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2022, 16:02 IST
Last Updated 15 ಮಾರ್ಚ್ 2022, 16:02 IST
ಹಿಜಾಬ್‌ ನಿರ್ಬಂಧ ವಿರೋಧಿಸಿ ನಡೆದಿದ್ದ ಪ್ರತಿಭಟನೆಗಳು
ಹಿಜಾಬ್‌ ನಿರ್ಬಂಧ ವಿರೋಧಿಸಿ ನಡೆದಿದ್ದ ಪ್ರತಿಭಟನೆಗಳು    

ಬೆಂಗಳೂರು: ‘ಕಾಲೇಜು ತರಗತಿಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡುವಂತೆ ನಿರ್ದೇಶಿಸಬೇಕು' ಎಂಬ ಕೋರಿಕೆಯ ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿರುವ ಹೈಕೋರ್ಟ್‌, ‘ಈ ವಿಷಯವನ್ನು ದೇಶದಾದ್ಯಂತ ವಿವಾದದ ವಿಷಯವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ’ ಎಂಬ ಬಲವಾದ ಸಂಶಯ ವ್ಯಕ್ತಪಡಿಸಿದೆ.

ಈ ಕುರಿತಂತೆ ಕಾಯ್ದಿರಿಸಲಾಗಿದ್ದ ತೀರ್ಪನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠ ಮಂಗಳವಾರ ಬೆಳಗ್ಗೆ 10.35ಕ್ಕೆ ಪ್ರಕಟಿಸಿತು.

‘ಹಿಜಾಬ್ ಇಸ್ಲಾಂನ ಅತ್ಯಾವಶ್ಯಕ ಧಾರ್ಮಿಕ ಆಚರಣೆ (ಇಆರ್‌ಪಿ) ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ. ಅಂತೆಯೇ ಇಸ್ಲಾಂ ಧರ್ಮದ ಅನುಸಾರ ಹಿಜಾಬ್ ಅತ್ಯಾವಶ್ಯಕ ಆಚರಣೆ ಎಂಬ ಉಲ್ಲೇಖಕ್ಕೆ ಯಾವುದೇ ಅಧಿಕೃತ ಕುರಾನಿನಲ್ಲಿ ಆಧಾರವಿಲ್ಲ’ ಎಂದು ನ್ಯಾಯಪೀಠದ ಮೂವರೂ ಸದಸ್ಯರು ಸಂಪೂರ್ಣ ಸಹಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಸರ್ಕಾರ ಸಮವಸ್ತ್ರ ಸಂಹಿತೆ ಕುರಿತಂತೆ 2022ರ ಫೆಬ್ರುವರಿ 5ರಂದು ಸುತ್ತೋಲೆ ಹೊರಡಿಸುವುದಕ್ಕೂ ಮುನ್ನವೇ ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಆರು ಜನ ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟ್‌ ಮೆಟ್ಟಿಲೇರಿ ಹಿಜಾಬ್‌ ಧರಿಸಲು ಅವಕಾಶ ನೀಡಬೇಕು ಎಂದು ಕೋರಿದ್ದರು. ಇದನ್ನು ಗಮನಿಸಿದಾಗ, 2021ರ ಡಿಸೆಂಬರ್‌ ಮೊದಲ ವಾರದಲ್ಲೇ ಈ ಕಾಲೇಜಿನಲ್ಲಿ ಹಿಜಾಬ್‌ ಕುರಿತಂತೆ ಹುನ್ನಾರ ರೂಪಿಸುವ ಪ್ರಯತ್ನ ನಡೆದಿವೆ’ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

‘ಬೇರೆ ಯಾವುದೇ ವಿದ್ಯಾರ್ಥಿನಿಯರು ಹಿಜಾಬ್‌ ಕುರಿತಂತೆ ಪ್ರಸ್ತಾಪ ಮಾಡದಿದ್ದ ಸನ್ನಿವೇಶದಲ್ಲಿ ಅರ್ಜಿದಾರ ವಿದ್ಯಾರ್ಥಿನಿಯರು ಮಾತ್ರವೇ ಈ ಕುರಿತಂತೆ ವಿವಾದ ಎಬ್ಬಿಸಲು ಮುಂದಾಗಿರುವುದು ಸಂಶಯಕ್ಕೆ ಆಸ್ಪದ ನೀಡಿದೆ. ಈ ಸಂಶಯದ ಹಿಂದೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ, ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಜಮಾತೆ ಇಸ್ಲಾಂನಂತಹ ಸಂಘಟನೆಗಳ ಕೈವಾಡ ಕಂಡು ಬರುತ್ತಿದೆ. ಈ ಸಂಘಟನೆಯ ಮುಖ್ಯಸ್ಥರು ಅರ್ಜಿದಾರ ವಿದ್ಯಾರ್ಥಿನಿಯರ ಕಾಲೇಜಿನ ಪ್ರಾಂಶುಪಾಲರಿಗೆ ಬೆದರಿಕೆ ಹಾಕಿ ದಾಂದಲೆ ಎಬ್ಬಿಸಿರುವುದನ್ನು ಗಮನಿಸಿದರೆ ಇಲ್ಲೇನೊ ಮಸಲತ್ತು ನಡೆಯುತ್ತಿದೆ ಎಂಬುದು ವೇದ್ಯವಾಗುತ್ತದೆ. ಈ ಸಂಬಂಧ ಪೊಲೀಸ್‌ ತನಿಖೆ ನಡೆಯುತ್ತಿದ್ದು ಈ ವಿಷಯದಲ್ಲಿ ಸಂಯಮ ಕಾಯ್ದುಕೊಂಡು ಹೋಗಲು ಬಯಸುತ್ತೇವೆ‘ ಎಂದು ನ್ಯಾಯಪೀಠ ಹೇಳಿದೆ.

ಕುರಾನ್‌ನಲ್ಲೇ ಇಲ್ಲ: ‘ಕುರಾನ್‌ನಲ್ಲಿ ಅನೇಕ ಪ್ರಕಾರದ ವ್ಯಾಖ್ಯಾನಗಳಿದ್ದು, ಯಾವ ಕುರಾನ್‌ ಅನ್ನು ಒಪ್ಪಬೇಕು ಎಂಬ ಪ್ರಶ್ನೆ ಎದುರಾಯಿತು. ಕಡೆಗೆ ಸುಪ್ರೀಂ ಕೋರ್ಟ್‌ ಈಗಾಗಲೇ ಶಾಬಾನು ಪ್ರಕರಣ, ಶಾಯಿರಾಬಾನು ಪ್ರಕರಣ ಹಾಗೂ ಸಿದ್ದಿಖಿ ಪ್ರಕರಣಗಳಲ್ಲಿ ಅಬ್ದುಲ್ಲಾ ಯೂಸುಫ್‌ ಅಲಿ ಅವರು ಇಂಗ್ಲಿಷ್‌ಗೆ ಭಾಷಾಂತರ ಮಾಡಿರುವ ಕುರಾನ್‌ನ ಅಧಿಕೃತತೆಯನ್ನು ಅವಲಂಬಿಸಿ ತೀರ್ಪು ನೀಡಿದ್ದನ್ನೇ ಇಲ್ಲೂ ಪರಿಗಣಿಸಿದ್ದೇವೆ. ಇದರ ಅನುಸಾರ ಅಬ್ದುಲ್ಲಾ ಯೂಸುಫ್‌ ಅಲಿ ಅವರ ಭಾಷಾಂತರ ಮಾಡಿರುವ ಕುರಾನ್‌ನಲ್ಲಿ ಎಲ್ಲೂ ಕೂಡಾ ಹಿಜಾಬ್‌ ಪ್ರಸ್ತಾಪವೇ ಇಲ್ಲ’ ಎಂಬ ಅಂಶವನ್ನು ನ್ಯಾಯಪೀಠ ಎತ್ತಿ ತೋರಿಸಿದೆ.

‘ಸಮವಸ್ತ್ರದ ಕಟ್ಟಳೆ ವಿಧಾನದ ಮೂಲಕ ಹಿಜಾಬ್‌ ನಿರ್ಬಂಧಿಸಿರುವುದು ಅರ್ಜಿದಾರರ ಧಾರ್ಮಿಕ ಸ್ವಾತಂತ್ರ್ಯ ಮತ್ತು ಖಾಸಗಿತನದ ಸ್ವಾತಂತ್ರ್ಯ ಹಕ್ಕಿನ ಉಲ್ಲಂಘನೆ’ ಎಂಬ ವಾದವನ್ನು ತಳ್ಳಿ ಹಾಕಿರುವ ನ್ಯಾಯಪೀಠ, ‘ಮೇಲು–ಕೀಳು, ಬಡವ–ಶ್ರೀಮಂತ ಎಂಬ ತರತಮಗಳನ್ನು ತೊರೆದು ವಿದ್ಯಾರ್ಥಿಗಳು ಅನುಶಾಸನದ ಶಿಕ್ಷಣ ಪಡೆಯಲಿ ಎಂಬ ಉದ್ದೇಶದಿಂದಲೇಸಮವಸ್ತ್ರ ಸಂಹಿತೆ ಇದೆ. ಹೀಗಾಗಿ, ಸಮವಸ್ತ್ರ ಕಟ್ಟಳೆ ವಿಧಿಸುವುದಕ್ಕೆ ಶಿಕ್ಷಣ ಸಂಸ್ಥೆಗಳಿಗೆ ಕರ್ನಾಟಕ ಶಿಕ್ಷಣ ಕಾಯ್ದೆ–1983 ಹಾಗೂ ಕರ್ನಾಟಕ ಶೈಕ್ಷಣಿಕ ಪಠ್ಯಕ್ರಮ ನಿಯಮಾವಳಿ–1995ರ ಅಡಿ ಅಧಿಕಾರವಿಲ್ಲ’ ಎಂಬ ಅರ್ಜಿದಾರರ ಮನವಿಯಲ್ಲಿ ಹುರುಳಿಲ್ಲ’ ಎಂದು ನ್ಯಾಯಪೀಠ ಹೇಳಿದೆ.

‘ಸಂವಿಧಾನದ 25ನೇ ವಿಧಿಯು ಧಾರ್ಮಿಕ ಆಚರಣೆಯ ರಕ್ಷಣೆಗಳ ಬಗ್ಗೆ ವಿವರಿಸುತ್ತದೆ. ಆದರೆ, ಅತ್ಯಾವಶ್ಯಕ ಧಾರ್ಮಿಕ ಆಚರಣೆಯ ಬಗ್ಗೆ ಹೇಳಿಲ್ಲ. ಆದಾಗ್ಯೂ, ಯಾವುದೇ ಧಾರ್ಮಿಕ ಚಟುವಟಿಕೆಗಳನ್ನು ನಿರ್ಬಂಧಿಸುವ ಅಧಿಕಾರ ಸಂವಿಧಾನದಲ್ಲಿ ಪ್ರದತ್ತವಾಗಿದೆ. ಈ ಅಂಶವನ್ನು ಸುಪ್ರೀಂ ಕೋರ್ಟ್‌ ಶಿರೂರು ಮಠದ ಪ್ರಕರಣದಿಂದ ಹಿಡಿದು ಶಬರಿಮಲೆ ಪ್ರಕರಣದವರೆಗೂ ಈಗಾಗಲೇ ಸ್ಪಷ್ಟಪಡಿಸಿದೆ’ ಎಂದು ತೀರ್ಪಿನಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.