ADVERTISEMENT

ಮದ್ಯ ಅಕ್ರಮ‌ ಸಾಗಣೆ: ಶಿಕ್ಷೆ ರದ್ದುಪಡಿಸಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2024, 23:30 IST
Last Updated 12 ಏಪ್ರಿಲ್ 2024, 23:30 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಬೆಂಗಳೂರು: ‘ಕೇವಲ ಪಂಚನಾಮೆ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್, ಮದ್ಯ ಅಕ್ರಮ ಸಾಗಣೆ ಆರೋಪದಡಿ ಇಬ್ಬರು ಆರೋಪಿಗಳಿಗೆ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿದೆ.

ಕಾನೂನು ಬಾಹಿರವಾಗಿ ಮದ್ಯ ಸಾಗಿಸಿದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ದಯಾನಂದ ಮತ್ತು ರವಿ ಎಂಬುವರು ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ADVERTISEMENT

‘ಆರೋಪ ಎದುರಾದಲ್ಲಿ ಮಾಹಿತಿದಾರರು ಸಹಿ ಹಾಕಿ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಬಹುದು. ಇಲ್ಲವೇ, ನಿಖರ ಮಾಹಿತಿಯ ಆಧಾರದಲ್ಲಿ ಪೊಲೀಸ್ ಅಧಿಕಾರಿಯೇ ಖುದ್ದು ದೂರು ದಾಖಲಿಸಿಕೊಂಡು ಎಫ್‌ಐಆರ್‌ ದಾಖಲಿಸುತ್ತಾರೆ. ಈ ಎರಡರಲ್ಲಿಯೂ ಮೊದಲು ಮಾಹಿತಿಯನ್ನು ಲಿಖಿತವಾಗಿ ದಾಖಲಿಸಿಕೊಂಡು ನಂತರ ತನಿಖೆ ನಡೆಸಲಾಗುತ್ತದೆ. ಆದರೆ, ಈ ಪ್ರಕರಣದಲ್ಲಿ ಅಂತಹ ಪ್ರಕ್ರಿಯೆ ನಡೆದಿಲ್ಲ. ಬದಲಿಗೆ ಮದ್ಯವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದವರಿಂದ ಮದ್ಯ ವಶಪಡಿಸಿಕೊಂಡು ಪಂಚನಾಮೆ ನಡೆಸಿದ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇದು ಕಾನೂನು ಬಾಹಿರ. ಈ ಅಂಶವನ್ನು ಪರಿಗಣಿಸದೆ ಶಿಕ್ಷೆ ವಿಧಿಸಿರುವುದು ದೋಷದಿಂದ ಕೂಡಿದೆ’ ಎಂದು ನ್ಯಾಯಪೀಠ ಹೇಳಿದೆ.

ಪ್ರಕರಣವೇನು?: ಹುಣಸೂರಿನ ಅಬಕಾರಿ ವಿಭಾಗದ ಸಬ್‌ ಇನ್‌ಸ್ಪೆಕ್ಟರ್‌ 2008ರ ನವೆಂಬರ್ 24ರಂದು ಬೆಳಿಗ್ಗೆ 10.15ರ ವೇಳೆ ಚಲ್ಲಹಳ್ಳಿ ಬಳಿ ಗಸ್ತು ತಿರುಗುವಾಗ ಅಕ್ರಮ‌ ಮದ್ಯ‌ ಸಾಗಣೆ ಪತ್ತೆ ಹಚ್ಚಿದ್ದರು.

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಒರಿಜಿನಲ್ ಚಾಯ್ಸ್‌ ಬ್ರಾಂಡ್‌ನ 48 ವಿಸ್ಕಿ ಬಾಟಲ್ ಗಳನ್ನು ಸಾಗಣೆ ಮಾಡಿದ ಆರೋಪದಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದಲ್ಲಿ ಮೈಸೂರಿನ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ ಮತ್ತು ₹ 1 ಲಕ್ಷ ದಂಡ ವಿಧಿಸಿತ್ತು. ಸೆಷನ್ಸ್ ನ್ಯಾಯಾಲಯ ಈ ಆದೇಶವನ್ನು ಎತ್ತಿ ಹಿಡಿದಿತ್ತು. ಅರ್ಜಿದಾರರು ಇದನ್ನು ಪ್ರಶ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.