ಬೆಂಗಳೂರು:ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮುಂದೂಡಬೇಕು ಎಂದುಕೋರಿದ್ದ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದು, ನಿಗದಿಯಂತೆ ಜುಲೈ 30 ಮತ್ತು 31ರಂದು ಪರೀಕ್ಷೆ ನಡೆಯಲಿದೆ.
ನ್ಯಾಯಮೂರ್ತಿ ಅರವಿಂದಕುಮಾರ್ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ವಿಭಾಗೀಯ ಪೀಠ ಬುಧವಾರ ಮಧ್ಯಾಹ್ನ 2.30ರಿಂದ ರಾತ್ರಿ 7.30ರ ತನಕ ವಿಚಾರಣೆ ನಡೆಸಿತು.
‘ಕೊರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲು ಪ್ರತ್ಯೇಕ ಸಾರಿಗೆ ವ್ಯವಸ್ಥೆ ಮಾಡ
ಬೇಕು. ಕಂಟೈನ್ಮೆಂಟ್ ವಲಯದ ವಿದ್ಯಾರ್ಥಿಗಳು ಮತ್ತು ಪೋಷಕರು ಪರೀಕ್ಷಾ ಕೇಂದ್ರಕ್ಕೆ ಹೋಗಲು ಅವಕಾಶ ನೀಡಬೇಕು. ಪರೀಕ್ಷೆ ಬರೆಯಲು ಇಚ್ಛಿಸುವ ಯಾವೊಬ್ಬ ವಿದ್ಯಾರ್ಥಿಯೂ ಅವಕಾಶ ವಂಚಿತರಾಗದಂತೆ ನೋಡಿಕೊಳ್ಳಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿತು.
‘ಹೊರ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್ ಮಾಡುವುದಿಲ್ಲ. ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಕೋವಿಡ್ ಸೋಂಕು ಹರಡದಂತೆ ಎಲ್ಲಾ ಮುನ್ನೆಚ್ಚರಿಕೆ ವಹಿಸಲಾಗಿದೆ. ಕಳೆದ ವರ್ಷ 431 ಪರೀಕ್ಷಾ ಕೇಂದ್ರಗಳಿದ್ದವು.
ಈ ವರ್ಷ 497ಕ್ಕೆ ಹೆಚ್ಚಿಸಲಾಗಿದೆ. ಸೋಂಕಿತರಿಗೆ ಆಂಬುಲೆನ್ಸ್ ವ್ಯವಸ್ಥೆ, ಕಂಟೈನ್ಮೆಂಟ್ ವಲಯದ ವಿದ್ಯಾರ್ಥಿ
ಗಳು ಪ್ರವೇಶ ಪತ್ರ ತೋರಿಸಿ ಹೊರಗೆ ಬರಲು ಅವಕಾಶ ಇದೆ. ಹೀಗಾಗಿ ಪರೀಕ್ಷೆ ನಡೆಸಲು ಅವಕಾಶ ನೀಡಬೇಕು’ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ನ್ಯಾಯಾಲಯಕ್ಕೆ ಲಿಖಿತ ಮಾಹಿತಿ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.