ADVERTISEMENT

ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ಸಂಬಳಕ್ಕೆ ಹೈಕೋರ್ಟ್ ತಡೆ

ಡಿಮ್ಹಾನ್ಸ್ ಉನ್ನತೀಕರಣ ವಿಳಂಬ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2022, 6:18 IST
Last Updated 5 ಏಪ್ರಿಲ್ 2022, 6:18 IST
ಹೈಕೋರ್ಟ್
ಹೈಕೋರ್ಟ್    

ಬೆಂಗಳೂರು:ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಗೆ (ಡಿಮ್ಹಾನ್ಸ್) ಎಂಆರ್‌ಐ ಮೆಷಿನ್ ಅಳವಡಿಸುವಲ್ಲಿ ವಿಳಂಬ ಧೋರಣೆ ಪ್ರದರ್ಶಿಸಿದ ಕಾರಣಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರ ವೇತನವನ್ನು ತಡೆ ಹಿಡಿಯುವಂತೆ ಹೈಕೋರ್ಟ್ ಆದೇಶಿಸಿದೆ.

"ಡಿಮ್ಹಾನ್ಸ್‌"ಗೆ ಅಗತ್ಯ ಸೌಲಭ್ಯ ಒದಗಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ" ಎಂದು ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

"ಎಂಆರ್‌ಐ ಮಷಿನ್ ಅಳವಡಿಕೆಯಾಗಿ, ಕಾರ್ಯಾರಂಭ ಮಾಡುವ ತನಕ ವೇತನ ಬಿಡುಗಡೆ ಮಾಡಬಾರದು" ಎಂದು ಸರ್ಕಾರಕ್ಕೆ ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಿದೆ.

ADVERTISEMENT

"ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (ಡಿಮ್ಹಾನ್ಸ್) ಎಂಆರ್‌ಐ ಯಂತ್ರವನ್ನು ಶೀಘ್ರ ಅಳವಡಿಸಬೇಕು ಹಾಗೂ ಉನ್ನತೀಕರಿಸಿದ ಮನೋ ವೈದ್ಯಕೀಯ ಆಸ್ಪತ್ರೆಯು ಏಪ್ರಿಲ್ 2ರಿಂದ ಕಾರ್ಯ ನಿರ್ವಹಣೆ ಮಾಡುವಂತೆ ನೋಡಿಕೊಳ್ಳಬೇಕು" ಎಂದು ಇದೇ ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ಕಳೆದ ವಿಚಾರಣೆ ವೇಳೆ ನಿರ್ದೇಶಿಸಿತ್ತು.

"ಡಿಮಾನ್ಸ್ ಉನ್ನತೀಕರಿಸಲು ಸರ್ಕಾರಕ್ಕೆ ಈಗಾಗಲೇ ಮೂರು ತಿಂಗಳ ಸಮಯ ನೀಡಲಾಗಿದೆ. ಆದರೂ, ಸರ್ಕಾರ ಪ್ರಗತಿ ತೋರಿಸಿಲ್ಲ. ಈ ಸರ್ಕಾರ ಕೆಲಸ ಮಾಡುವಂತೆ ಮಾಡಲು ಏನು ಮಾಡಬೇಕು, ನಿಮಗೆ ಆಸ್ಪತ್ರೆ ಬೇಡ ಅಂದರೆ ಅದನ್ನು ಮುಚ್ಚಿ ಬಿಡಿ. ಆಗ ಉನ್ನತೀಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ" ಎಂದು ಮುಖ್ಯ ನ್ಯಾಯಮೂರ್ತಿಗಳು ಹಿಂದಿನ ವಿಚಾರಣೆ ವೇಳೆ ಸರ್ಕಾರಕ್ಕೆ ಚಾಟಿ ಬೀಸಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.