ADVERTISEMENT

ಕೆರೆಗಳ ನಿರ್ಲಕ್ಷ್ಯ: ಸರ್ಕಾರಕ್ಕೆ ಹೈಕೋರ್ಟ್‌ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 14 ಜನವರಿ 2020, 2:45 IST
Last Updated 14 ಜನವರಿ 2020, 2:45 IST
   

ಬೆಂಗಳೂರು: ‘ರಾಜ್ಯದಾದ್ಯಂತ ಎಷ್ಟು ಕೆರೆ ಒತ್ತುವರಿ ಆಗಿವೆ ಮತ್ತು ಎಷ್ಟು ಕೆರೆಗಳ ಸರ್ವೇ ನಡೆಸಲಾಗಿದೆ, ಒತ್ತುವರಿ ತೆರವಿಗೆ ಎನು ಕ್ರಮ ಕೈಗೊಳ್ಳಲಾಗಿದೆ ಎಂಬ ಸಮಗ್ರ ವರದಿಯನ್ನು ಫೆಬ್ರುವರಿ 14ರೊಳಗೆ ಸಲ್ಲಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.

ಕೆರೆ ಸಂರಕ್ಷಣೆ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಒಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ, ‘ಕೆರೆಗಳ ಸಂರಕ್ಷಣೆಗೆ 2008ರಲ್ಲಿ ಹೈಕೋರ್ಟ್‌ ನೀಡಿರುವ ಆದೇಶಗಳನ್ನು ಸಮರ್ಪಕವಾಗಿ ಪಾಲನೆ ಮಾಡಿಲ್ಲ. ಈ ಕುರಿತಂತೆ ಹೈಕೋರ್ಟ್‌ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿಕೊಳ್ಳಲಿದೆ’ ಎಂದು ಎಚ್ಚರಿಸಿದೆ.

ವಿಚಾರಣೆ ವೇಳೆ ಸರ್ಕಾರಿ ವಕೀಲ ವೈ.ಎಚ್.ವಿಜಯಕುಮಾರ್, ‘ಈ ಮೊದಲು ಚಾಲ್ತಿಯಲ್ಲಿದ್ದ ಕೆರೆ ಅಭಿವೃದ್ಧಿ ಪ್ರಾಧಿಕಾರವನ್ನು ರದ್ದುಗೊಳಿಸಲಾಗಿದೆ. ಇದನ್ನು ಸಣ್ಣ ನೀರಾವರಿ ಇಲಾಖೆಯಲ್ಲಿ ವಿಲೀನಗೊಳಿಸಲಾಗಿದೆ. ಕೆರೆಗಳ ರಕ್ಷಣೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಸದ್ಯ 15 ಜಿಲ್ಲಾ ಸಮಿತಿಗಳಿವೆ’ ಎಂಬ ಅಂಶವನ್ನು ನ್ಯಾಯಪೀಠ ಗಮನಕ್ಕೆ ತಂದರು.

ADVERTISEMENT

ಇದಕ್ಕೆ ನ್ಯಾಯಪೀಠ ‘ರಾಜ್ಯದಲ್ಲಿ ಒಟ್ಟು ಎಷ್ಟು ಕೆರೆಗಳಿದ್ದವು, ಈಗ ಎಷ್ಟಿವೆ, ಎಷ್ಟು ಕೆರೆ ನಾಪತ್ತೆಯಾಗಿವೆ, ಎಷ್ಟು ಒತ್ತುವರಿಯಾಗಿವೆ, ಕೆರೆ, ಕುಂಟೆ ಸೇರಿದಂತೆ ನೀರು ನಿಲ್ಲುವ ಪ್ರದೇಶಗಳನ್ನು ಏಕೆ ಸರ್ವೇ ಮಾಡಿಲ್ಲ, ಕೆರೆ ಅಭಿವೃದ್ಧಿ ಪ್ರಾಧಿಕಾರ ಕಲೆ ಹಾಕಿದ ಅಂಕಿ ಅಂಶಗಳೆಲ್ಲಾ ಎಲ್ಲಿವೆ, ಅವುಗಳನ್ನು ಕೋರ್ಟ್‌ಗೆ ಸಲ್ಲಿಸಿ’ ಎಂದು ತಾಕೀತು ಮಾಡಿದೆ.

‘ಕೆರೆಗಳ ಕುರಿಂತೆ ಭಾರತೀಯ ಸರ್ವೇಕ್ಷಣಾ ಇಲಾಖೆ1972ರಲ್ಲಿ ನಡೆಸಿದ ಹಾಗೂ ಸೂಕ್ಷ್ಮ ಸಂವೇದಿ ತಂತ್ರಜ್ಞಾನ ಆಧಾರಿತ ವರದಿಗಳನ್ನು ಮುಂದಿನ ವಿಚಾರಣೆ ವೇಳೆಗೆ ಸಲ್ಲಿಸಿ’ ಎಂದೂ ನ್ಯಾಯಪೀಠ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.