ADVERTISEMENT

ಸೇವಾ ಭದ್ರತೆಗೆ ಅತಿಥಿ ಉಪನ್ಯಾಸಕರ ಬೇಡಿಕೆ: ಪರಿಶೀಲನೆ ಭರವಸೆ ನೀಡಿದ ಸಚಿವ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 4:59 IST
Last Updated 29 ನವೆಂಬರ್ 2022, 4:59 IST
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ   

ಬೆಂಗಳೂರು: ‘ಸೇವಾ ಭದ್ರತೆಯೊಂದಿಗೆ ವಾರ್ಷಿಕ ಶೇ 5ರಷ್ಟು ಗೌರವಧನ ಹೆಚ್ಚಿಸಬೇಕು, ನಿವೃತ್ತಿಯ ಸಂದರ್ಭದಲ್ಲಿ ₹ 25 ಲಕ್ಷ ಇಡುಗಂಟು, ಕಾಯಂ ಉಪನ್ಯಾಸಕರಿಗೆ ನೀಡುವಂತೆ ಒಒಡಿ ಹಾಗೂರಜೆ ಸೌಲಭ್ಯ ನೀಡಬೇಕೆಂಬ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವ ಸಾಧ್ಯತೆಗಳ ಕುರಿತು ಪರಿಶೀಲಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.

ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷರಾಗಿರುವ ವಿಧಾನ ಪರಿಷತ್‌ಸದಸ್ಯ ಆಯನೂರು ಮಂಜುನಾಥ್‌ ಅವರ ನೇತೃತ್ವದಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಅರುಣ್‌ ಶಿವಮೊಗ್ಗ ಮತ್ತಿತರ ಮನವಿ ಸ್ವೀಕರಿಸಿ ಸಚಿವರು ಪ್ರತಿಕ್ರಿಯಿಸಿದರು.

‘ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ 430 ಸರ್ಕಾರಿ ಪ್ರಥಮ ದರ್ಜೆಕಾಲೇಜುಗಳಲ್ಲಿರುವ 11 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿಗೆ ಸೇವಾ ವಿಲೀನದ ಸೌಲಭ್ಯ ನೀಡುವ ಮೂಲಕ, ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಬೇಕು. ಹಾಗೆಯೇ ಎನ್‌ಇಪಿ ಅನುಸಾರ 40ರಿಂದ 50 ವಿದ್ಯಾರ್ಥಿಗಳಂತೆಒಂದೊಂದು ತರಗತಿಗಳನ್ನು ವಿಭಾಗಿಸುವುದರಿಂದ ಅಲ್ಲಿ ನೇಮಕಾತಿಗೆ ಪರಿಗಣಿಸಬೇಕು’ ಎಂದು ಮನವಿಯಲ್ಲಿ ಸಮಿತಿ ಉಲ್ಲೇಖಿಸಿದೆ.

ADVERTISEMENT

‘ನೇಮಕಾತಿಗಳಲ್ಲಿ ಮೀಸಲಾತಿ, ವಯೋಮಿತಿ ಸಡಿಲಿಕೆ, ವೇತನಸಹಿತ ಆರು ತಿಂಗಳ ಮಾತೃತ್ವ,ಪಿತೃತ್ವ ರಜೆ, ವಿಮೆ, ಇಎಸ್‌ಐ ಮತ್ತು ಇಪಿಎಫ್‌ಸೌಲಭ್ಯಗಳನ್ನು ಒದಗಿಸಬೇಕು. ಹಾಗೆಯೇ,ಮೌಲ್ಯಮಾಪನಕ್ಕೆ ತೆರಳಿದ ದಿನಗಳ ಗೌರವಧನ ಕಡಿತ ಮಾಡಬಾರದು, ಪರಸ್ಪರ ಸ್ಥಳ ಬದಲಾವಣೆ, ಕಾರ್ಯಭಾರದ ಕೊರತೆ ಉಂಟಾದರೆ ಕರ್ತವ್ಯದಿಂದ ಬಿಡುಗಡೆಗೊಳಿಸದೆ ಕಾರ್ಯಭಾರವಿರುವ ಕಾಲೇಜುಗಳಿಗೆ ವರ್ಗಾವಣೆ ಮಾಡುವ ನೀತಿಜಾರಿಗೆ ತರಬೇಕು’ ಎಂದೂ ಮನವಿಯಲ್ಲಿ ಆಗ್ರಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.