ಬೆಂಗಳೂರು: ‘ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ತುರ್ತು ಪರಿಸ್ಥಿತಿ ಹೇರಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಅದು ಭಾರತದ ಇತಿಹಾಸದಲ್ಲೇ ಕಪ್ಪುಚುಕ್ಕೆಯಾಗಿ ದಾಖಲಾದಂತಹ ದಿನ. ಅದೇ ರೀತಿ ಈಗಲೂ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ನರೇಂದ್ರ ಮೋದಿ ಸರ್ಕಾರವು ಪ್ರಜಾಪ್ರಭುತ್ವ ವಿರೋಧಿ ಧೋರಣೆಗಳನ್ನು ಅನುಸರಿಸುತ್ತಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿದೆ’ ಎಂದು ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಸ್ಥಾವರಮಠ ಹೇಳಿದರು.
ತುರ್ತುಪರಿಸ್ಥಿತಿ ಘೋಷಣೆಗೆ 46 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಪಕ್ಷದ ವತಿಯಿಂದ ಶುಕ್ರವಾರ ‘ಕರಾಳ ದಿನ’ ಆಚರಿಸಲಾಯಿತು. ಈ ವೇಳೆ ಅವರು ಮಾತನಾಡಿದರು.
‘ಜಯಪ್ರಕಾಶ್ ನಾರಾಯಣ್, ಮೊರಾರ್ಜಿ ದೇಸಾಯಿ, ಚರಣ್ ಸಿಂಗ್ ಹೀಗೆ ಅನೇಕ ನಾಯಕರು ತುರ್ತು ಪರಿಸ್ಥಿತಿ ವಿರುದ್ಧ ಧ್ವನಿ ಎತ್ತಿದ್ದರು. ಇದರ ವಿರುದ್ಧ ಸಂಪೂರ್ಣ ಕ್ರಾಂತಿ ಘೋಷಿಸಿದ್ದರು. ಅದೇ ರೀತಿ ನಾವು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಮತ್ತೊಮ್ಮೆ ಸಂಪೂರ್ಣ ಕ್ರಾಂತಿ ನಡೆಸುತ್ತೇವೆ. ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ’ ಎಂದರು.
ರಾಜ್ಯ ಘಟಕದ ಅಧ್ಯಕ್ಷ ಕೆ.ಎಂ.ಪಾಲಾಕ್ಷ, ಬೆಂಗಳೂರು ನಗರ ಅಧ್ಯಕ್ಷ ಎನ್.ನಾಗೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ವೀರೇಶ್, ಕಾರ್ಯಾಧ್ಯಕ್ಷ ಶಂಕರ್ ಶೆಟ್ಟಿ, ಮುಖಂಡರಾದ ಅಬ್ದುಲ್ ಬಶೀರ್, ಇಮ್ತಿಯಾಜ್ ಅಖ್ತರ್, ರಾಜ್ಯ ಯುವ ಘಟಕದ ಅಧ್ಯಕ್ಷ ಭಾಸ್ಕರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.