
ರಾಮನಗರ: ‘ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಫೆ. 26ರಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಬರಲು ಸೂಚನೆ ನೀಡಿದೆ. ಅಂದು ನಮ್ಮ ನಾಯಕನಿಗೆ ಒಳ್ಳೆಯದಾಗಲಿದೆ’ ಎಂದು ಡಿಸಿಎಂ ಆಪ್ತ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.
ಈ ಕುರಿತು ನಗರದಲ್ಲಿ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಎರಡೂವರೆ ವರ್ಷ ಅಧಿಕಾರ ಪೂರ್ಣಗೊಳಿಸಿದ್ದಾರೆ. ಉಳಿದ ಎರಡೂವರೆ ವರ್ಷದ ಅವಧಿಗೆ ಶಿವಕುಮಾರ್ ಅವರಿಗೆ ಅವಕಾಶ ನೀಡಬೇಕು ಎಂಬುದು ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರ ಬಯಕೆಯಾಗಿದೆ’ ಎಂದರು.
‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವ ಹಿರಿಯ ಸಚಿವ ಸತೀಶ ಜಾರಕಿಹೊಳಿ ಅವರು ಸಹ ನಾಯಕತ್ವ ಗೊಂದಲವನ್ನು ಪರಿಹರಿಸುವಂತೆ ಹೈಕಮಾಂಡ್ಗೆ ಒತ್ತಾಯಿಸಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಶಿವಕುಮಾರ್ ತುಂಬಾ ಶ್ರಮಿಸಿದ್ದಾರೆ. ಮುಂದೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಂಘಟಿಸಬೇಕಾದರೆ ಅವರಿಗೂ ಅಧಿಕಾರ ನೀಡಬೇಕು’ ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್ ಕುರಿತು ಪ್ರತಿಕ್ರಿಯಿಸಿದ ಹುಸೇನ್, ‘ನಾನೂ ಸೇರಿದಂತೆ ಪಕ್ಷದ 140 ಶಾಸಕರೂ ನಾಯಕತ್ವ ಬದಲಾವಣೆ ಬೇಕು ಎಂದು ಕೇಳುದ್ದೇವೆ. ಇದರಲ್ಲಿ ಪಟ್ಟಭದ್ರ ಹಿತಾಸಕ್ತಿಯಾಗಲಿ, ಗುಂಪುಗಾರಿಕೆಯಾಗಲಿ ಇಲ್ಲ’ ಎಂದು ತಿರುಗೇಟು ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.