ADVERTISEMENT

ಕೇಸರಿ ಧಿರಿಸಲ್ಲಿ ಪೊಲೀಸರು: ತ್ರಿಶೂಲ ದೀಕ್ಷೆಯನ್ನೂ ಕೊಡಬೇಕಿತ್ತೆಂದ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಅಕ್ಟೋಬರ್ 2021, 10:38 IST
Last Updated 17 ಅಕ್ಟೋಬರ್ 2021, 10:38 IST
ಕೇಸರಿ ವಸ್ತ್ರದಲ್ಲಿ ಉಡುಪಿಯ ಕಾಪು ಠಾಣೆಯ ಪೊಲೀಸ್‌ ಸಿಬ್ಬಂದಿ ಮತ್ತು ಅಧಿಕಾರಿಗಳು
ಕೇಸರಿ ವಸ್ತ್ರದಲ್ಲಿ ಉಡುಪಿಯ ಕಾಪು ಠಾಣೆಯ ಪೊಲೀಸ್‌ ಸಿಬ್ಬಂದಿ ಮತ್ತು ಅಧಿಕಾರಿಗಳು   

ಬೆಂಗಳೂರು: ವಿಜಯಪುರ ಗ್ರಾಮೀಣ ಠಾಣೆ ಮತ್ತು ಉಡುಪಿಯ ಕಾಪು ಠಾಣೆಯ ಪೊಲೀಸ್‌ ಸಿಬ್ಬಂದಿ ಮತ್ತು ಅಧಿಕಾರಿಗಳು ಕೇಸರಿ ಶಾಲು, ಬಿಳಿಟೊಪ್ಪಿ, ಕುರ್ತಾ ತೊಟ್ಟು ಆಯುಧಪೂಜೆ ನೆರವೇರಿಸಿದ್ದಕ್ಕೆ ಸಂಬಂಧಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಟ್ಯಾಗ್‌ ಮಾಡಿ ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, 'ಪೊಲೀಸರ ಧಿರಿಸು ಮಾತ್ರ ಏಕೆ ಬದಲಾಯಿಸಿದ್ದೀರಿ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು, ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್‌ ರಾಜ್‌ ಸ್ಥಾಪನೆಯ ಕನಸು ನನಸಾಗಬಹುದು' ಎಂದಿದ್ದಾರೆ.

'ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ ಪೊಲೀಸ್‌ಗಿರಿಯ ದೌರ್ಜನ್ಯ. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ. ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ. ಇದಕ್ಕೆಲ್ಲ ಮುಖ್ಯಮಂತ್ರಿ ಅವರ ಬಹಿರಂಗ ಬೆಂಬಲ. ರಾಜ್ಯದಲ್ಲಿ ಸರ್ಕಾರ ಇದೆಯೇ?' ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ.

ADVERTISEMENT

'ಗೂಂಡಾಗಿರಿಯನ್ನು 'ಕ್ರಿಯೆಗೆ ಪ್ರತಿಕ್ರಿಯೆ' ಎಂದು ಸಮರ್ಥಿಸಿದ ಸಿಎಂ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ' ಎಂದು ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

'ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವ ಪರಂಪರೆ ಇದೆ. ಇದು ಸಿಎಂ ಯೋಗಿ ಆದಿತ್ಯನಾಥ್‌ ಅವರ ಉತ್ತರಪ್ರದೇಶದ ಜಂಗಲ್‌ ರಾಜ್‌ ಅಲ್ಲ. ಬಸವರಾಜ ಬೊಮ್ಮಾಯಿ ಅವರೇ, ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ' ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.