ಬೆಂಗಳೂರು: ಕೋವಿಡ್ ಲಸಿಕೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟು ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ರೆಮ್ಡಿಸಿವಿರ್ ಅಕ್ರಮವಾಗಿ ಸಂಗ್ರಹಿಸಿಟ್ಟು ಕೃತಕ ಅಭಾವ ಸೃಷ್ಟಿಸಲಾಯಿತು. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರಿಂದ ಪರಿಸ್ಥಿತಿ ಸುಧಾರಿಸಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಖಾಸಗಿ ಆಸ್ಪತ್ರೆಗಳು ಲಸಿಕೆ ನೀಡುವ ಸಂಬಂಧದಲ್ಲಿ ಕೇಂದ್ರ ಸರ್ಕಾರ ಒಂದು ನಿಯಮವನ್ನು ರೂಪಿಸಬೇಕಾಗಿದೆ. ಇಲ್ಲವಾದರೆ ಅನಗತ್ಯ ಗೊಂದಲ ಸೃಷ್ಟಿಯಾಗುತ್ತದೆ. ಆದ್ದರಿಂದ ನಿಯಮ ರೂಪಿಸಬೇಕು. ಹಾಸಿಗೆ ಸಮಸ್ಯೆ ಬಹುತೇಕ ಬಗೆಹರಿದಿದೆ. ವೆಂಟಿಲೇಟರ್ ಸಮಸ್ಯೆ ಇದೆ. ಆದಷ್ಟು ಬೇಗನೆ ಕೊರತೆ ನೀಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ ಲಾಕ್ಡೌನ್ ಪರಿಣಾಮಕಾರಿಯಾಗಿದೆ. ಜನರು ಪಾಲಿಸುತ್ತಿದ್ದಾರೆ. ಆದರೆ ಪಟ್ಟಣ ಪ್ರದೇಶದಲ್ಲಿ ಜನರು ಮಾರ್ಗಸೂಚಿ ಉಲ್ಲಂಘಿಸುತ್ತಿದ್ದಾರೆ. ಆದ್ದರಿಂದ ಬಿಗಿಯಾದ ಕ್ರಮಗಳನ್ನು ತಗೆದುಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅನಗತ್ಯವಾಗಿ ಓಡಾಡುವವರನ್ನು ಬಿಡುವುದಿಲ್ಲ, ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.