ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದಿಂದ ವಲಸೆ ಬಂದು ಕಾಂಗ್ರೆಸ್ ಪಕ್ಷದಲ್ಲಿ ಗೂಡು ಕಟ್ಟಿಕೊಂಡಿದ್ದಾರೆ. ಅವರಿಗೆ ಸೋಲಿನ ಭಯ ಕಾಡಲು ಕಾರಣವೇನು ಎಂದು ಬಿಜೆಪಿ ಪ್ರಶ್ನಿಸಿದೆ.
ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದಿಂದ ವಲಸೆ ಬಂದು ಕಾಂಗ್ರೆಸ್ ಪಕ್ಷದಲ್ಲಿ ಗೂಡು ಕಟ್ಟಿದ್ದೀರಿ. ಮುಖ್ಯಮಂತ್ರಿಯಾಗಿದ್ದುಕೊಂಡು ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸೋತು ಬಾದಾಮಿಯಲ್ಲಿ ಉಸಿರು ಗಟ್ಟಿಸಿಕೊಂಡು ಗೆದ್ದಿದ್ದೀರಿ. ಈಗ ಗೆಲುವಿಗಾಗಿ ಕ್ಷೇತ್ರದ ಹುಡುಕಾಟ ನಡೆಸುತ್ತಿದ್ದೀರಿ. ಅಷ್ಟೊಂದು ಸೋಲಿನ ಭಯ ಕಾಡಲು ಕಾರಣವೇನು?’ ಎಂದು ಪ್ರಶ್ನಿಸಿದೆ.
‘ಸಿದ್ದರಾಮಯ್ಯ ಅವರೇ ಸೋಲಿನ ಭಯದಿಂದ ರಾಹುಲ್ ಗಾಂಧಿಯವರು ಕೇರಳಕ್ಕೆ ವಲಸೆ ಬಂದರು. ಸೋಲು ಕಾಣದ ಖರ್ಗೆಯವರು ಸೋತರು. ಮುಖ್ಯಮಂತ್ರಿಯಾಗಿದ್ದಾಗಲೇ ತಾವು ಸೋತಿದ್ದೀರಿ. ಸ್ವ ಕ್ಷೇತ್ರಗಳಲ್ಲಿ ಗೆಲ್ಲಲಾರದವರು ವಲಸೆ ಕ್ಷೇತ್ರದಲ್ಲಿ ಗೆಲ್ಲುವ ಕನಸು ಕಾಣುವುದೇಕೆ?’ ಎಂದು ಬಿಜೆಪಿ ಟೀಕಿಸಿದೆ.
ಸಿದ್ದರಾಮಯ್ಯ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ವಿರುದ್ಧ ತುಮಕೂರು ಜಿಲ್ಲೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಇತ್ತೀಚೆಗೆ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿ, ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೂರಕ್ಕೆ ನೂರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ’ ಎಂದು ಹೇಳಿದ್ದರು.
ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.