ಬೆಂಗಳೂರು: ಬೆಡ್ ಬ್ಲಾಕಿಂಗ್ ಬಳಿಕ ಬಿಜೆಪಿಯವರು ವ್ಯಾಕ್ಸಿನ್ ಬ್ಲಾಕಿಂಗ್ ದಂಧೆ ನಡೆಸುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪಿಸಿದೆ.
ಕೋವಿಡ್ ಲಸಿಕೆ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ರವಿ ಸುಬ್ರಮಣ್ಯ ಅವರು ಉಚಿತವಾಗಿ ನೀಡಬೇಕಿದ್ದ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳ ಮೂಲಕ ಮಾರಾಟ ಮಾಡುತ್ತಿದ್ದಾರೆ. ಇದಕ್ಕೆ ಬೆಂಬಲವಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿ ಇಡೀ ಸರ್ಕಾರವೇ ಈ ಹಗರಣದಲ್ಲಿದೆ’ ಎಂದು ವಾಗ್ದಾಳಿ ನಡೆಸಿದೆ.
‘ಬೆಡ್ ಬ್ಲಾಕಿಂಗ್ ದಂಧೆ ನಡೆಸುತ್ತಿದ್ದ ಬಿಜೆಪಿ ಪಟಾಲಂ ಈಗ ವ್ಯಾಕ್ಸಿನ್ ಬ್ಲಾಕಿಂಗ್ ಹಗರಣ ನಡೆಸಿದೆ. ಬಿಬಿಎಂಪಿ ಲಸಿಕೆಗಳನ್ನು ₹900 ಕ್ಕೆ ಖಾಸಗಿ ಆಸ್ಪತ್ರೆಗಳಲ್ಲಿ ಮಾರಿ ಶಾಸಕ ರವಿ ಸುಬ್ರಮಣ್ಯ ಹಾಗೂ ತೇಜಸ್ವಿ ಸೂರ್ಯ ₹700 ಕಮಿಷನ್ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ’ ಎಂದು ಕಾಂಗ್ರೆಸ್ ಮತ್ತೊಂದು ಟ್ವೀಟ್ ಮಾಡಿದೆ.
‘ಖಾಸಗಿ ಆಸ್ಪತ್ರೆಗಳಲ್ಲಿ ನಿಮ್ಮ (ಬಿಜೆಪಿ) ಶಾಸಕ, ಸಂಸದರು ₹900 ಗಳಿಗೆ ಲಸಿಕೆ ಮಾರುತ್ತಿರುವುದು ಹೇಗೆ? ಆ ಲಸಿಕೆಗಳು ಎಲ್ಲಿಂದ ಸಿಕ್ಕವು, ಸರ್ಕಾರಕ್ಕೆ ಲಸಿಕೆ ಸಿಗದಂತೆ ಬ್ಲಾಕ್ ಮಾಡುತ್ತಿರುವುದು ಯಾರು, ಏಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.