ಕಲಬುರಗಿ: ‘ರಾಜ್ಯ ಬಿಜೆಪಿ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಕುರಿತು ‘ಪ್ರಜಾವಾಣಿ’ ಸರಣಿ ವರದಿ ಪ್ರಕಟಿಸುತ್ತಿದೆ. ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿರುವ ರಾಜ್ಯ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಹುಮಾನ ನೀಡಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಕಿದರು.
‘ಬಡ ರೈತರ ಹೊಲಗಳಿಗೆ ಬೋರ್ವೆಲ್ ಕೊರೆಸುವ ಗಂಗಾ ಕಲ್ಯಾಣ ಯೋಜನೆಯಲ್ಲಿಯೂ ಭಾರಿ ಭ್ರಷ್ಟಾಚಾರ ನಡೆದಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ದಾಖಲೆಗಳನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ’ ಎಂದು ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಏನೇ ರಾಜಕಾರಣ ಮಾಡಲಿ, ಯೋಜನೆ ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಬಿಜೆಪಿ ಕೇಂದ್ರ ಸಮಿತಿಯವರು ನೀರಾವರಿ ವಿಚಾರದಲ್ಲಿ ತಮಿಳುನಾಡು– ಗೋವಾ ಬೇಕೋ; ಕರ್ನಾಟಕ ಬೇಕೋ ಎಂಬುದನ್ನು ನಿರ್ಧರಿಸಲಿ. ಈ ವಿಚಾರದಲ್ಲಿ ರಾಜ್ಯದ 26 ಬಿಜೆಪಿ ಸಂಸದರು ಗಮನ ಹರಿಸಬೇಕು ಎಂದರು.
‘ಯಾರು ಏನೇ ಹೇಳಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ನಮಗೆ ವಿಶ್ವಾಸವಿದೆ’ ಎಂದು ಜಿ–23 ಗುಂಪಿನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
‘ಭಗವದ್ಗೀತೆ ಅಳವಡಿಸಿದ್ದೇ ಕಾಂಗ್ರೆಸ್’: ‘ಬಿಜೆಪಿಯವರಿಗಿಂತ ಮುಂಚೆಯೇ ನಾವು ಭಗವದ್ಗೀತೆಯಲ್ಲಿನ ಉತ್ತಮ ಅಂಶಗಳನ್ನು ಪಠ್ಯಪುಸ್ತಕದಲ್ಲಿ ಸೇರಿಸಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.