ADVERTISEMENT

ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು: ಸಿ.ಟಿ.ರವಿ ವಿರುದ್ಧ ಎಚ್‌ಡಿಕೆ ಗರಂ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 12:56 IST
Last Updated 1 ಸೆಪ್ಟೆಂಬರ್ 2020, 12:56 IST
ಸಚಿವ ಸಿ.ಟಿ.ರವಿ ಹಾಗೂ ಎಚ್‌.ಡಿ.ಕುಮಾರಸ್ವಾಮಿ
ಸಚಿವ ಸಿ.ಟಿ.ರವಿ ಹಾಗೂ ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿತಿರುಗೇಟು ನೀಡಿದ್ದಾರೆ.

ಸರಣಿ ಟ್ವೀಟ್‌ ಮಾಡಿರುವ ಅವರು, ‘ನಾನು ಮುಖ್ಯಮಂತ್ರಿ ಆಗಿದ್ದಾಗ ಕ್ರಿಕೆಟ್ ಬೆಟ್ಟಿಂಗ್, ಮಾದಕ ದ್ರವ್ಯ, ಮೀಟರ್ ಬಡ್ಡಿ ಹತ್ತಿಕ್ಕಲು ವಿಶೇಷ ತಂಡ ರಚಿಸಿದ್ದೆ. ಇದರಿಂದ ಕನಲಿ ಹೋಗಿದ್ದ ದಂಧೆಕೋರರು ಶ್ರೀಲಂಕಾ ಹಾಗೂ ಮುಂಬೈಗೆ ಹಾರಿ ಹೋಗಿದ್ದರು. ಆಮೇಲೆ ಶಾಸಕರನ್ನು ಮುಂಬೈಗೆ ಕರೆದೊಯ್ಯುವಾಗ ಶಾಸಕರ ಜೊತೆ ಕಂಪನಿ ಕೊಟ್ಟಿದ್ದರು' ಎಂದು ಆಕ್ರೋಶ ಹೊರಹಾಕಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್, ಮಾಫಿಯಾ ಬಳಸಿಕೊಂಡೇ ನಮ್ಮ ಸರಕಾರದಲ್ಲಿದ್ದ ಶಾಸಕರನ್ನು ಬಿಜೆಪಿಯವರು ಬುಕ್ ಮಾಡಿಕೊಂಡಿದ್ದರು ಎಂಬುದು ಗುಟ್ಟಾಗಿ ಉಳಿದಿಲ್ಲ. ಕೆಲ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಎರಡು ಗಂಟೆಗೊಂದು ವಿಶೇಷ ವಿಮಾನದ ಮೂಲಕ ಕರೆದುಕೊಂಡು ಹೋದಾಗ ಯಾರು ಜೊತೆಯಲ್ಲಿ ಇದ್ದರು ಎಂಬುದು ಇಡೀ ನಾಡಿಗೆ ಗೊತ್ತಿದೆ ಎಂದು ಕಿಡಿಕಾರಿದ್ದಾರೆ.

ADVERTISEMENT

ಶಾಸಕರನ್ನು ಖರೀದಿ ಮಾಡಿ, ಕ್ರಿಕೆಟ್ ಬೆಟ್ಟಿಂಗ್, ಡ್ರಗ್‌ ಮಾಫಿಯಾದ ಪಾಪದ ಹಣವನ್ನು ಚೆಲ್ಲಿ ಸರ್ಕಾರ ಉಳಿಸಿಕೊಳ್ಳುವ ವ್ಯಕ್ತಿ ನಾನಲ್ಲ. ಅಂತಹ ಕುಕೃತ್ಯಕ್ಕೆ ಇಳಿಯುವ ಜಾಯಮಾನ ನನ್ನದಾಗಿದ್ದರೆ ನನ್ನ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿರಲಿಲ್ಲ ಎಂದು ತಿಳಿಸಿದ್ದಾರೆ.

ಖಜಾನೆಗೆ 25 ಸಾವಿರ ಕೋಟಿ ಹಣವನ್ನು ಸಂಗ್ರಹಿಸಿ ರೈತರ ಸಾಲ ಮನ್ನಾ ಮಾಡಿದ ಮುಖ್ಯಮಂತ್ರಿ ನಾನು. ಹೀಗಾಗಿ ಲೂಟಿ ಮಾಡಿದವರು ಅಧಿಕಾರದ ಅಮಲಿನಲ್ಲಿ ತೇಲಾಡುವಾಗ ಬಾಯಿಗೆ ಬಂದಂತೆ ಮಾತನಾಡುತ್ತಿರುವುದನ್ನು ಕೇಳಿಸಿಕೊಳ್ಳಬೇಕಾಗಿಲ್ಲ ಎಂದಿದ್ದಾರೆ.

ಸಿ.ಟಿ. ರವಿ ಬೇರೆಯವರ ಬಗ್ಗೆ ಮಾತನಾಡಿದಂತೆ ನನ್ನ ಬಗ್ಗೆ ಮಾತನಾಡಿದರೆ ನಾನು ಸುಮ್ಮನಿರಲ್ಲ. ಅಧಿಕಾರದಲ್ಲಿ ಇರುವ ಸಚಿವರು ಮಾತಿನಲ್ಲಿ ನಿಗಾ ಇಡುವುದು ಒಳಿತು ಎಂದು ಕಿವಿಮಾತು ಹೇಳಿದ್ದಾರೆ.

ಸಿ.ಟಿ.ರವಿ ತಿರುಗೇಟು: ನೀವೇ ಮುಖ್ಯಮಂತ್ರಿಯ ಸ್ಥಾನದಲ್ಲಿ ಕುಳಿತಿದ್ದಾಗ ಡ್ರಗ್ ಮಾಫಿಯಾ ನಿಮ್ಮ ಸರಕಾರವನ್ನು ಬೀಳಿಸುವಷ್ಟು ಪ್ರಬಲವಾಗಿತ್ತೆ ಕುಮಾರಸ್ವಾಮಿಯವರೆ? ಒಂದು ಮಾಫಿಯಾವನ್ನು ಬಗ್ಗುಬಡಿಯದಷ್ಟು ದುರ್ಬಲವಾಗಿತ್ತೆ ತಮ್ಮ ಸರಕಾರ ಮಾಜಿ ಮುಖ್ಯಮಂತ್ರಿಗಳೇ?

ಒಂದು ದಿನ ಕಾಂಗ್ರೆಸ್‌ ನನ್ನ ಸರ್ಕಾರವನ್ನು ಬೀಳಿಸಿತು. ಅನ್ನುವ ತಾವು, ಇಂದು ಡ್ರಗ್ ಮಾಫಿಯಾ ನನ್ನ ಸರ್ಕಾರವನ್ನು ಬೀಳಿಸಿತು ಅನ್ನುತ್ತೀರಿ. ಯಾವುದು ಸತ್ಯ- ಯಾವುದು ಮಿಥ್ಯ? ಭಗವಂತನೇ ಬಲ್ಲ ಈ ನಾಲಿಗೆಯ ಪರಿಯ!!! ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಟ್ವಿಟರ್‌ನಲ್ಲಿ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.