ಪ್ರಿಯಾಂಕ್ ಖರ್ಗೆ ಮತ್ತು ಬಿ.ವೈ.ವಿಜಯೇಂದ್ರ
ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರ ನಗರದಲ್ಲಿ ರಾಷ್ಟೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಪಥ ಸಂಚಲನ ಕಾರ್ಯಕ್ರಮಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಅನುಮತಿ ನಿರಾಕರಿಸಿ ಆದೇಶ ಹೊರಡಿಸಿರುವ ಕುರಿತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.
‘ಚಿತ್ತಾಪುರದಲ್ಲಿ ಸಂವಿಧಾನದ ಹೆಸರಿನಲ್ಲಿ ಬೊಗಳೆ ಬಿಡುವವರಿಂದಲೇ ಸಾಂವಿಧಾನಿಕ ಹಕ್ಕು ಕಸಿಯಲಾಗುತ್ತಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಸಂಭ್ರಮಾಚರಣೆಗೆ ತಹಸೀಲ್ದಾರರ ಮೂಲಕ 12 ಮಾಹಿತಿ ಹಾಗೂ ದಾಖಲೆಗಳನ್ನು ಸಲ್ಲಿಸಿಲ್ಲವೆಂದು ಅನುಮತಿ ನಿರಾಕರಿಸಿರುವ ಪರಿ ಉತ್ತರ ಕೋರಿಯಾದ ತಿಕ್ಕಲು ಸರ್ವಾಧಿಕಾರಿ ಕಿಂಗ್ ಜಾಂಗ್ ಉನ್ ಆಡಳಿತ ವೈಖರಿಯನ್ನು ನೆನಪಿಸುತ್ತಿದೆ’ ಎಂದು ವಿಜಯೇಂದ್ರ ಟೀಕಿಸಿದ್ದಾರೆ.
‘ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷದ ಕರಾಳ ಇತಿಹಾಸ ಅತ್ಯಂತ ಪ್ರಿಯವಾಗಿರುವಂತಿದೆ. ಈ ಕಾರಣಕ್ಕಾಗಿಯೇ ಕಲಬುರಗಿ ಜಿಲ್ಲೆಯಲ್ಲಿ ತುರ್ತು ಪರಿಸ್ಥಿತಿ ನೆನಪಿಸುವ ರೀತಿಯ ಆಡಳಿತವನ್ನು ಜಾರಿಗೆ ತರಲು ಹೊರಟಿದ್ದಾರೆ, ಇದಕ್ಕಾಗಿ ಚಿತ್ತಾಪುರವನ್ನು ಚಿಮ್ಮುವ ಹಲಗೆಯಂತೆ ಪ್ರಯೋಗಿಸುತ್ತಿದ್ದಾರೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
‘ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವ ರೀತಿಯಲ್ಲಿ ಚಿತ್ತಾಪುರದಲ್ಲಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣ ಮಾಡಿದ್ದಾರೆ’ ಎಂದು ಪ್ರಿಯಾಂಕ್ ವಿರುದ್ಧ ವಿಜಯೇಂದ್ರ ಗುಡುಗಿದ್ದಾರೆ.
‘ಆರ್ಎಸ್ಎಸ್ ಪಥಸಂಚಲನ ಹಾಗೂ ಕಾರ್ಯಕ್ರಮದ ಅನುಮತಿಗೆ ವಿಧಿಸಿರುವ ಷರತ್ತುಗಳನ್ನು ರಾಜ್ಯಕ್ಕೆ ಅನ್ವಯಿಸಿ ಬಿಟ್ಟರೆ ಕರ್ನಾಟಕದ ಯಾವುದೇ ಮೂಲೆಗಳಲ್ಲೂ ಯಾವುದೇ ಸಾಂಸ್ಕೃತಿಕ ಹಾಗೂ ರಾಷ್ಟ್ರಭಕ್ತಿಯ ಕಾರ್ಯಕ್ರಮಗಳನ್ನು ನಡೆಸಲು ಆಸ್ಪದವೇ ಇಲ್ಲದಂಥ ಪರಿಸ್ಥಿತಿ ನಿರ್ಮಾಣವಾಗಲಿದೆ. ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಮಾದರಿಯ ಆಡಳಿತ ಹೇರಲು ಕಾಂಗ್ರೆಸ್ ಸರ್ಕಾರ ಯೋಜನೆ ರೂಪಿಸುತ್ತಿದೆ ಅದಕ್ಕೆ ಚಿತ್ತಾಪುರವನ್ನು ಪ್ರಯೋಗಾಲಯ ಮಾಡಿಕೊಂಡಿದೆ’ ಎಂದು ಅವರು ಕುಟುಕಿದ್ದಾರೆ.
‘ಚಿತ್ತಾಪುರದಲ್ಲಿ ಸದ್ಯ ಸರ್ವಾಧಿಕಾರಿ ಆಡಳಿತ VS ಪ್ರಜಾಪ್ರಭುತ್ವದ ನಡುವಿನ ಸಮರ’ ಆರಂಭವಾಗಿದೆ. ಇದನ್ನು ಸವಾಲಾಗಿ ಸ್ವೀಕರಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಸಲು ಬಿಜೆಪಿ ಹೋರಾಟ ಕೈಗೆತ್ತಿಕೊಳ್ಳಲಿದೆ’ ಎಂದು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.