ಬೆಂಗಳೂರು: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಉಪಚುನಾವಣೆಯಲ್ಲಿ ಟಿಕೆಟ್ ಸಿಗುವ ಸಾಧ್ಯತೆ ಇಲ್ಲದಿರುವುದರಿಂದ ತಮ್ಮ ಮುಂದಿನ ರಾಜಕೀಯ ಭವಿಷ್ಯವೇನು ಎಂಬ ಆತಂಕ ಅವರನ್ನು ಕಾಡಿದೆ.
ಅಥಣಿ ಕ್ಷೇತ್ರದಲ್ಲಿ ಅನರ್ಹ ಶಾಸಕ ಮಹೇಶ್ ಕುಮಠಳ್ಳಿ ಅವರಿಗೆ ಟಿಕೆಟ್ ನೀಡಲು ಪಕ್ಷ ನಿರ್ಧರಿಸಿದ್ದು, ಅಲ್ಲಿ ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಸವದಿಯವರಿಗೇ ನೀಡಲಾಗಿದೆ.
ಈ ಕ್ಷೇತ್ರದಿಂದ ಸ್ಪರ್ಧಿಸಲು ಸವದಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಅನರ್ಹ ಶಾಸಕರಿಗೆ ಟಿಕೆಟ್ ಭರವಸೆ ನೀಡಲಾಗಿದೆ. ಕೊಟ್ಟ ಮಾತಿಗೆ ತಪ್ಪಲು ಮುಖ್ಯಮಂತ್ರಿ ಯಡಿಯೂರಪ್ಪ ಸಿದ್ಧರಿಲ್ಲ. ಹೀಗಾಗಿ ಮುಂದೇನು ಎಂಬ ಆತಂಕ ಸವದಿಯವರನ್ನು ಕಾಡಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರೂ ಸವದಿಯವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು. ಉಪಮುಖ್ಯಮಂತ್ರಿಯಂತಹ ದೊಡ್ಡ ಜವಾಬ್ದಾರಿ ನೀಡಿದ್ದರಿಂದ ಟಿಕೆಟ್ ಖಚಿತ ಎಂದೇ ಭಾವಿಸಲಾಗಿತ್ತು. ಆ ಸಾಧ್ಯತೆ ಈಗ ದೂರವಾಗಿದೆ. ವಿಧಾನಪರಿಷತ್ತಿಗೆ ನೇಮಕ ಮಾಡುವ ಸಾಧ್ಯತೆ ಇದೆ. ವಿಧಾನಪರಿಷತ್ನಲ್ಲಿ 2022 ರವರೆಗೆ ಯಾವುದೇ ಸದಸ್ಯರ ಸ್ಥಾನಗಳು ತೆರವಾಗುವುದಿಲ್ಲ. ಹೀಗಾಗಿ ಪರಿಷತ್ನ ನಿಷ್ಠಾವಂತ ಸದಸ್ಯರಿಂದ ರಾಜೀನಾಮೆ ಕೊಡಿಸಿ, ಆ ಸ್ಥಾನಕ್ಕೆ ಸವದಿಯವರನ್ನು ನೇಮಕ ಮಾಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.