
ಬಸನಗೌಡ ಪಾಟೀಲ ಯತ್ನಾಳ ಮತ್ತು ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಶಾಲಾ ಮಕ್ಕಳಿಗೆ ಶೌಚಾಲಯ ಸ್ವಚ್ಛ ಮಾಡುವ ಕೆಲಸವನ್ನು ನೀಡಿರುವುದನ್ನು ಬಿಜೆಪಿ ಶಾಸಕ ಬಸನಗೌಡ ಯತ್ನಾಳ ತೀವ್ರವಾಗಿ ಖಂಡಿಸಿದ್ದಾರೆ.
‘ಸಿದ್ದರಾಮಯ್ಯ ಅವರ ಸ್ವಕ್ಷೇತ್ರದಲ್ಲೇ ಈ ಪರಿಸ್ಥಿತಿ ಎಂದರೆ ಇನ್ನು ರಾಜ್ಯದ ಬೇರೆ ಶಾಲೆಗಳಲ್ಲಿ ಇರುವ ಪರಿಸ್ಥಿತಿಯನ್ನು ವಿವರಿಸಬೇಕಾಗಿಲ್ಲ. ತಮ್ಮ ಕ್ಷೇತ್ರದ ಅಧಿಕಾರಿಗಳು, ಶಿಕ್ಷಣ ವ್ಯವಸ್ಥೆಯ ಮೇಲೆ ಮುಖ್ಯಮಂತ್ರಿಗಳಿಗೆ ಹಿಡಿತವಿಲ್ಲ ಎಂದರೆ ಇನ್ನು ರಾಜ್ಯದಲ್ಲಿರುವ ಶಾಲೆಗಳ, ಅಲ್ಲಿನ ಅವ್ಯವಸ್ಥೆಗಳ ಪಾಡು ಏನೆಂದು ನಾವು ಊಹಿಸಿಕೊಳ್ಳಬಹುದು’ ಎಂದು ಯತ್ನಾಳ ಬೇಸರ ಹೊರಹಾಕಿದ್ದಾರೆ.
ಸಿದ್ದರಾಮಯ್ಯ ಅವರೇ, ಸದನದಲ್ಲಿ ‘ಸಂಧಿ’, ‘ಸಮಾಸ’ ಪಾಠ ಮಾಡುವ ಮೊದಲು ತಮ್ಮ ಕ್ಷೇತ್ರದಲ್ಲಿನ ಶಾಲೆಗಳ ಸಮಸ್ಯೆಗಳನ್ನು ಬಗೆಹರಿಸಿ ಎಂದು ಯತ್ನಾಳ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ಬಿಲಗೆರೆಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶಿಕ್ಷಕರ ಸೂಚನೆಯಂತೆ ಶಾಲಾ ಆವರಣದಲ್ಲಿರುವ ಸಂಪ್ನಿಂದ ಮಕ್ಕಳು ನೀರು ತಂದು ಶೌಚಾಲಯಗಳನ್ನು ಸ್ವಚ್ಛಗೊಳಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.