
ಸಿದ್ದರಾಮಯ್ಯ
ಮಂಗಳೂರು: ಹೈಕಮಾಂಡ್ ತೀರ್ಮಾನ ಮಾಡಿದರೆ ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಸಿದ್ದರಾಮಯ್ಯ ಹೇಳಿದರು.
ಸೋಮವಾರ ಇಲ್ಲಿ ‘ಐದು ವರ್ಷ ನೀವೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಾ’ ಎಂಬ ಮಾಧ್ಯಮದವರ ಪ್ರಶ್ನೆಗೆ , ‘ಹೈಕಮಾಂಡ್ ತೀರ್ಮಾನ ಮಾಡಿದರೆ’ ಎಂದು ಪ್ರತಿಕ್ರಿಯಿಸಿದರು.
ಕೆಲವರು ತಾವೂ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ, ‘ಪ್ರಜಾಪ್ರಭುತ್ವದಲ್ಲಿ ಸ್ಪರ್ಧೆಯಲ್ಲಿ ಇರಬಾರದು ಎಂದು ಹೇಳಲು ಆಗಲ್ಲ. ಆಕಾಂಕ್ಷೆ ವ್ಯಕ್ತಪಡಿಸುವುದು ಅವರ ಹಕ್ಕು. ಅಂತಿಮವಾಗಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದರು.
‘ಮುಖ್ಯಮಂತ್ರಿ ಬದಲಾವಣೆ ವಿಷಯ ಪದೇ ಪದೇ ಏಕೆ ಚರ್ಚೆಯಾಗುತ್ತಿದೆ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನೀವು (ಮಾಧ್ಯಮದವರು) ಪದೇ ಪದೇ ಕೇಳುತ್ತೀರಲ್ಲ. ಅದಕ್ಕೆ ವಿಷಯ ಚರ್ಚೆಗೆ ಬರುತ್ತದೆ’ ಎಂದರು.
ಎಸ್ಐಟಿ: ‘ಧರ್ಮಸ್ಥಳ ಪ್ರರಕಣದ ತನಿಖೆ ನಡೆಸುತ್ತಿರುವ ಎಸ್ಐಟಿ ಈ ತಿಂಗಳಾಂತ್ಯದಲ್ಲಿ ವರದಿ ಕೊಡಬಹುದು ಎಂದು ಗೃಹ ಸಚಿವರು ಹೇಳಿದ್ದಾರೆ. ತನಿಖೆಯ ವಿಷಯದಲ್ಲಿ ನಾನು ಹಸ್ತಕ್ಷೇಪ ಮಾಡಲ್ಲ. ಎಸ್ಐಟಿ ಈ ತಿಂಗಳಾಂತ್ಯಕ್ಕೆ ವರದಿ ಕೊಡಬಹುದು, ಕೊಡದೇ ಇರಬಹುದು’ ಎಂದು ಮುಖ್ಯಮಂತ್ರಿ ಪ್ರತಿಕ್ರಿಯಿಸಿದರು.
ದ್ವೇಷಭಾಷಣ: ‘ಯಾರೇ ದ್ವೇಷ ಭಾಷಣ ಮಾಡಿದರೂ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ಸಮಾಜದಲ್ಲಿ ಅಸೂಯೆ–ದ್ವೇಷ ಹುಟ್ಟುಹಾಕಲು ಅವಕಾಶ ನೀಡುವುದಿಲ್ಲ. ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಹೇಳಿದರು.
‘ಆರ್ಎಸ್ಎಸ್ ಆಸ್ತಿಗಳ ಆಡಿಟ್ ಮಾಡುವ ವಿಷಯವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ನೀಡಿದ್ದಾರೆನ್ನಲಾದ ಹೇಳಿಕೆ ನನಗೆ ಗೊತ್ತಿಲ್ಲ. ಆ ಬಗ್ಗೆ ಅವರನ್ನೇ ಕೇಳಿ’ ಎಂದು ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.