ADVERTISEMENT

ರಾಜ್ಯ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆಯಾಗಿದೆ: ಸಿದ್ದರಾಮ‌ಯ್ಯ ಕಿಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಆಗಸ್ಟ್ 2022, 4:49 IST
Last Updated 19 ಆಗಸ್ಟ್ 2022, 4:49 IST
ಸಿದ್ದರಾಮ‌ಯ್ಯ
ಸಿದ್ದರಾಮ‌ಯ್ಯ    

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮ‌ಯ್ಯ ಆರೋಪಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಗುರುವಾರ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಿದ್ದರು. ಕಪ್ಪು ಬಾವುಟ ಪ್ರದರ್ಶಿಸಿ, ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು.

ಘಟನೆಯನ್ನು ಖಂಡಿಸಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ರಾಜ್ಯ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆಯಾಗಿದೆ. ಬಿಜೆಪಿ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಇದೇ 26ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ’ ಎಂದು ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

‘ಬಿಜೆಪಿಯವರ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ’ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿ ಕಾರ್ಯಕರ್ತರ ವರ್ತನೆ ಖಂಡಿಸಿರುವ ಸಿದ್ದರಾಮಯ್ಯ, ‘ಹೆಜ್ಜೆಹೆಜ್ಜೆಗೂ ಬಿಜೆಪಿ ಕಾರ್ಯಕರ್ತರು ಕಪ್ಪುಬಾವುಟ ಪ್ರದರ್ಶಿಸಿದ್ದಾರೆ. ಇದು ಹೇಡಿಗಳ ಕೃತ್ಯವಾಗಿದೆ. ಪೊಲೀಸ್ ಇಲಾಖೆ ಭದ್ರತೆ ನೀಡಲು ವಿಫಲವಾಗಿದೆ’ ಎಂದು ಗುಡುಗಿದ್ದಾರೆ.

ಮೊಟ್ಟೆ ಎಸೆತ: ಬೊಮ್ಮಾಯಿ ಪ್ರತಿಕ್ರಿಯೆ ಹೀಗಿತ್ತು...
ಸಿದ್ದರಾಮಯ್ಯನವರ ಕೊಡಗು ಪ್ರವಾಸದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಿಎಂ‌ ಬೊಮ್ಮಾಯಿ, ‘ಯಾರ ಬಗೆಗಾದರೂ ಭಿನ್ನಾಭಿಪ್ರಾಯ ಇದ್ದರೆ, ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕೇ ವಿನಃ ದೈಹಿಕ ಕಾರ್ಯದಿಂದಲ್ಲ’ ಎಂದಿದ್ದಾರೆ.

‘ಸಿದ್ದರಾಮಯ್ಯನವರು, ವಿರೋಧ ಪಕ್ಷದ ನಾಯಕರಾಗಿದ್ದು, ಆ ಸ್ಥಾನಕ್ಕೆ ತನ್ನದೇ ಆದ ಗೌರವ ಇದೆ. ಗೌರವಿಸುವುದನ್ನು ಎಲ್ಲರೂ ಪಾಲಿಸಬೇಕು’ ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಸೂಕ್ತ ಭದ್ರತೆ: ಆರಗ ಭರವಸೆ
ಸಿದ್ದರಾಮಯ್ಯ ಕಾರಿಗೆ ಮೊಟ್ಟೆಯನ್ನು ತೂರಿರುವ ಘಟನೆ ಬಗ್ಗೆ ಅರಿವಿದೆ. ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ರಾಜ್ಯದ ಡಿಜಿ–ಐಜಿಪಿ ಅವರಿಗೆ ಸೂಚಿಸಲಾಗಿದೆ‌ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ‌ತಿಳಿಸಿದ್ದಾರೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.