
ಮೈಸೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಹಸ್ತಾಂತರದ ಒಪ್ಪಂದ ಆಗಿಲ್ಲವೆಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಗೆ ಬಂದು ಪ್ರಮಾಣ ಮಾಡಲಿ’ ಎಂದು ವಿಧಾನಪರಿಷತ್ ಸದಸ್ಯ ಬಿಜೆಪಿಯ ಎ.ಎಚ್. ವಿಶ್ವನಾಥ್ ಹೇಳಿದರು.
‘ನಾನೇ ಐದು ವರ್ಷವೂ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ತಾಯಿ ಚಾಮುಂಡಿ ಮುಂದೆ ಹೇಳಲಿ’ ಎಂದು ಇಲ್ಲಿ ಶುಕ್ರವಾರ ಸವಾಲು ಹಾಕಿದರು.
‘ಡಿ.ಕೆ. ಶಿವಕುಮಾರ್ ಮೂಲ ಕಾಂಗ್ರೆಸ್ಸಿಗ. ಪಕ್ಷ ಅಧಿಕಾರಕ್ಕೆ ತರುವಲ್ಲಿ ಅವರ ಶ್ರಮ ಹೆಚ್ಚಿದೆ. ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡಲೇಬೇಕು’ ಎಂದರು.
‘ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ. ಸ್ವಾರ್ಥಕ್ಕಾಗಿ ಯಾರೊಂದಿಗೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ’ ಎಂದು ಟೀಕಿಸಿದರು.
‘ಪಕ್ಷಗಳ ನಡುವಿನ ಸಂಘರ್ಷ ಸಾಮಾನ್ಯ. ಆದರೆ, ಜಾತಿ ಸಂಘರ್ಷ ಅಪಾಯಕಾರಿ. ಅಧಿಕಾರ ಹಸ್ತಾಂತರ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆಯದಿದ್ದರಿಂದ ಏನೇನೋ ಆಗುತ್ತಿದೆ. ಆದಿಚುಂಚನಗಿರಿ ಸ್ವಾಮೀಜಿ ಗುರಿಯಾಗಿಸಿಕೊಂಡು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವುದು ಸರಿಯಲ್ಲ. ಸಿದ್ದರಾಮಯ್ಯ ಪರ ಯತೀಂದ್ರ ಬಿಟ್ಟರೆ ಯಾರೊಬ್ಬರೂ ಮಾತನಾಡುತ್ತಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.